ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಸಂಸ್ಕಾರವು ಇಂದು ಸಂಜೆ ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ನಡೆಯಲಿದೆ. ದಿವಂಗತ ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲೇ, ವೀರಶೈವ ಲಿಂಗಾಯತ ಸಂಪ್ರದಾಯದ ವಿಧಿವಿಧಾನಗಳ ಪ್ರಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಕ್ರಿಯೆಗೆ ಸಿದ್ಧತೆಗಳನ್ನು ಮಾಡಲಾಗಿದೆ.
ಬೆಂಗಳೂರಿನ ಸದಾಶಿವನಗರದ ನಿವಾಸದಿಂದ ಮಧ್ಯರಾತ್ರಿ ಹೊರಟಿದ್ದ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರ ಇಂದು ಮುಂಜಾನೆ 4 ಗಂಟೆಗೆ ದಾವಣಗೆರೆ ತಲುಪಿದೆ.
ಮೊದಲು, ಹಿರಿಯ ಮಗ ಎಸ್.ಎಸ್. ಬಕ್ಕೇಶ್ ಅವರ ನಿವಾಸ, ನಂತರ ಎಸ್.ಎಸ್. ಗಣೇಶ್ ಅವರ ಮನೆ ಮತ್ತು ಕೊನೆಯಲ್ಲಿ ಮೂರನೇ ಮಗ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಮನೆಯಲ್ಲಿ ಕಣ್ವೆಕುಪ್ಪೆ ಶ್ರೀಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.
ಮೂರು ಮನೆಗಳ ವಿಧಿವಿಧಾನಗಳ ಬಳಿಕ, ಪಾರ್ಥಿವ ಶರೀರವನ್ನು ಶಾಮನೂರು ಶಿವಶಂಕರಪ್ಪ ಅವರ ನಿವಾಸದ ಮುಂಭಾಗದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ನಂತರ ಮಧ್ಯಾಹ್ನ 12 ಗಂಟೆಗೆ ಹೈಸ್ಕೂಲ್ ಮೈದಾನದಲ್ಲಿ ಮತ್ತೊಮ್ಮೆ ಸಾರ್ವಜನಿಕರು ಮತ್ತು ಗಣ್ಯರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಾರ್ವಜನಿಕ ದರ್ಶನ ಮುಗಿದ ನಂತರ, ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಭವ್ಯ ಮೆರವಣಿಗೆಯೊಂದಿಗೆ ಅಂತಿಮ ಯಾತ್ರೆ ಸಾಗಲಿದೆ. ದಾವಣಗೆರೆ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಸ್ಮರಿಸಲು, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾರ್ಯಕರ್ತರು ಮತ್ತು ಅಭಿಮಾನಿಗಳು ನಗರದಲ್ಲಿ ಗೌರವದ ಮೆರವಣಿಗೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಅಭಿಮಾನಿಗಳ ಮನವಿಯಂತೆ, ಸುಮಾರು 15 ಕಿಲೋಮೀಟರ್ ಉದ್ದದ ಅಂತಿಮ ಯಾತ್ರೆಯ ಮೆರವಣಿಗೆಗೆ ವ್ಯವಸ್ಥೆ ಮಾಡಲಾಗಿದೆ.
ಮೆರವಣಿಗೆ ಸಾಗುವ ಮಾರ್ಗಗಳು: ಹೈಸ್ಕೂಲ್ ಮೈದಾನದಿಂದ ಆರಂಭವಾಗುವ ಅಂತಿಮ ಯಾತ್ರೆಯು ಹಳೇ ಕೋರ್ಟ್ ಮೈದಾನ, ಎಸಿ ಕ್ರಾಸ್, ರೇಣುಕಾ ಮಂದಿರ ಸರ್ಕಲ್, ಅರುಣ ಸರ್ಕಲ್, ಹೊಂಡದ ಸರ್ಕಲ್, ದುರ್ಗಾಂಬಿಕ ದೇವಾಲಯ, ಹಗೆದಿಬ್ಬ ಸರ್ಕಲ್, ಕಾಳಿಕಾಂಬ ದೇವಸ್ಥಾನ ರಸ್ತೆ, ಗ್ಯಾಸ್ ಕಟ್ಟೆ ಸರ್ಕಲ್, ಬಕ್ಕೇಶ್ವರ ದೇವಸ್ಥಾನದ ಮುಂಭಾಗ, ಹಾಸಭಾವಿ ಸರ್ಕಲ್, ಗಣೇಶ ದೇವಸ್ಥಾನ ಮತ್ತು ಅರಳಿ ಮರ ಸರ್ಕಲ್, ವೆಂಕಟೇಶ್ವರ ಸರ್ಕಲ್ ಮೂಲಕ ಕಲ್ಲೇಶ್ವರ ರೈಸ್ ಮಿಲ್ಗೆ ತಲುಪಲಿದೆ.
ಸಂಜೆ 6 ಗಂಟೆಯ ಸುಮಾರಿಗೆ ಕಲ್ಲೇಶ್ವರ ರೈಸ್ ಮಿಲ್ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

