ಹೊಸದಿಗಂತ ಡಿಜಿಟಲ್ ಡೆಸ್ಕ್
ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಿನ ಕುರಿತು ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಸಂಸದ, ಶಶಿ ತರೂರ್ ಮಾತನಾಡಿದ್ದು, ನಾನು ಗುಜರಾತ್ನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ವ್ಯಕ್ತಿಯೂ ಅಲ್ಲ. ಹಾಗೆಯೇ ಪ್ರಚಾರ ಮಾಡಬೇಕೆಂದು ನಿರೀಕ್ಷಿಸಿದ್ದ ಪಟ್ಟಿಯಲ್ಲೂ ನಾನಿರಲಿಲ್ಲ. ಹೀಗಾಗಿ ಸ್ಥಳೀಯವಾಗಿ ನಾನು ಅಲ್ಲಿ ಇಲ್ಲದೇ ಇದ್ದಿದ್ದರಿಂದ ಈ ಪ್ರಶ್ನೆಗೆ ಉತ್ತರಿಸುವುದು ಬಲು ಕಷ್ಟದ ಕೆಲಸ ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಕೆಲಸ ಮಾಡಿದ್ದು ಇದು ನಮಗೆ ಸಹಕಾರಿಯಾಯ್ತು, ಆದರೆ ಗುಜರಾತ್ನಲ್ಲಿ ಅದು ಕೆಲಸ ಮಾಡಲಿಲ್ಲ ಎಂದರು. ಈ ಸೋಲನ್ನು ಒಪ್ಪಿಕೊಳ್ಳಲು ಕಾಂಗ್ರೆಸ್ ಹಿಂಜರಿಯುತ್ತಿರುವುದನ್ನು ಒಪ್ಪಿಕೊಂಡ ಅವರು ಕೆಲವು ಕ್ಷೇತ್ರಗಳಲ್ಲಿ ಎಎಪಿಯ ಸ್ಪರ್ಧೆಯೂ ನಮ್ಮ ಮತಗಳನ್ನು ಕಸಿದುಕೊಳ್ಳುವಲ್ಲಿ ಯಶಸ್ವಿಯಾಯ್ತು ಎಂಬುದನ್ನು ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ಅ ವರ ಎಎಪಿಯೂ ಗುಜರಾತ್ನಲ್ಲಿ ಆರು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಖಾತೆ ತೆರೆದಿದೆ. ಆದರೆ ಅಲ್ಲಿ ಎಎಪಿ ನಿರೀಕ್ಷೆ ಮಾಡಿದ್ದಕ್ಕಿಂತ ಕಡಿಮೆ ಸಾಧನೆಯಾಗಿದೆ. ಆದರೂ ಕಾಂಗ್ರೆಸ್ ಅಥವಾ ಬಿಜೆಪಿ ಎರಡೇ ಆಯ್ಕೆ ಇದ್ದಂತಹ ಗುಜರಾತ್ನಲ್ಲಿ ಮತಗಳ ಧ್ರುವೀಕರಣಕ್ಕೆ ಎಎಪಿ ಕಾರಣವಾಗಿದೆ ಎಂಬುದನ್ನು ಅವರು ಹೇಳಿದ್ದಾರೆ.
ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಹಿರಿಯ ತಲೆಗಳ ವಿರೋಧದ ನಡುವೆಯೂ ಶಶಿ ತರೂರ್ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದ ನಂತರ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಪ್ರಚಾರ ಮಾಡಬೇಕಿದ್ದ ಕಾಂಗ್ರೆಸ್ ನಾಯಕರ ಪಟ್ಟಿಯಿಂದ ಅವರನ್ನು ಕೈ ಬಿಡಲಾಗಿತ್ತು.