ಶಿರಾಡಿ ಹೆದ್ದಾರಿ ಉನ್ನತೀಕರಣಕ್ಕೆ ಹಸಿರು ನಿಶಾನೆ: ಕೇಂದ್ರಕ್ಕೆ ಸಚಿವ ಸಿ .ಸಿ. ಪಾಟೀಲರ ಅಭಿನಂದನೆ

ಹೊಸದಿಗಂತ ವರದಿ,ಗದಗ:

ರಾಜ್ಯದ ಮಹಾತ್ವಾಕಾಂಕ್ಷಿ ಯೋಜನೆ ಮತ್ತು ಬಹುದಿನಗಳ ಬೇಡಿಕೆಯಾಗಿದ್ದ ಶಿರಾಡಿ ಘಾಟ್ ಹೆದ್ದಾರಿಯ ದುರಸ್ತಿ ಮತ್ತು ಚತುಷ್ಪಥ ನಿರ್ಮಾಣ ಯೋಜನೆಗೆ ಸುಮಾರು ೧,೨೦೦ ಕೋಟಿ ರೂ. ಕಾಮಗಾರಿಗಳಿಗೆ ಕೇಂದ್ರ ಸರ್ಕಾರವು ಹಸಿರು ನಿಶಾನೆ ನೀಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನವದೆಹಲಿಗೆ ತೆರಳಿ ಶಿರಾಡಿಘಾಟ್ ಚತುಷ್ಪತ ಯೋಜನೆ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ಮಾಡಿಕೊಂಡ ಮನವಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ, ತುರ್ತಾಗಿ ಆದ್ಯತೆಯ ಮೇರೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಗಡ್ಕರಿ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿರುವುದು ಅವರ ಜನಪರ ಕಾಳಜಿಗೆ ನಿದರ್ಶನವಾಗಿದೆ.
ವಾಣಿಜ್ಯ ನಗರಿಯಾದ ಮಂಗಳೂರು ಮತ್ತು ಬೆಂಗಳೂರು ನಡುವೆ ಪ್ರಮುಖ ಸಂಪರ್ಕದ ಕೊಂಡಿಯಾಗಿದ್ದ ಶಿರಾಡಿ ಘಾಟ್ ರಸ್ತೆ ಪ್ರತಿವರ್ಷ ಮಳೆಗಾಲದಲ್ಲಿ ಭೂಕುಸಿತ ಮತ್ತಿತರ ಕಾರಣಗಳಿಂದ ಹಾನಿಗೊಂಡು ಸಂಚಾರ ಸಂಪರ್ಕ ಸಾಗಾಟಕ್ಕೆ ತೀರಾ ತೊಂದರೆಯಾಗುತ್ತಿತ್ತು. ಈಗ ಶಿರಾಡಿ ಚತುಷ್ಪತ ರಸ್ತೆ ವಿಸ್ತರಣೆಗೆ ಹಸಿರು ನಿಶಾನೆ ದೊರೆತಿರುವುದರಿಂದ ಬಹುಕಾಲದ ಈ ಸಮಸ್ಯೆಗೆ ಮುಕ್ತಿ ಸಿಗುವಂತಾಗಿದೆ .
ಈ ಯೋಜನೆ ಕೈಗೂಡುವಂತಾಗುವಲ್ಲಿ ಅಪಾರ ಶ್ರಮ ವಹಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೂ ನಾನು ಕೃತಜ್ಞತೆ ಅರ್ಪಿಸುತ್ತೇನೆ.ಕೇಂದ್ರದಿಂದ ಅನುಮೋದನೆಗೊಂಡ ಈ ಯೋಜನೆಯನ್ನು ಉತ್ತಮ ಗುಣಮಟ್ಟದೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ಉದ್ದೇಶ ನಮ್ಮದಾಗಿದೆ. ಯೋಜನೆಯಿಂದ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ವರದಾನವಾಗಲಿದೆ ಎಂದು ಸಚಿವ ಸಿ.ಸಿ.ಪಾಟೀಲ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!