ಹೊಸ ದಿಗಂತ ವರದಿ, ಶಿವಮೊಗ್ಗ:
ಶಿವಮೊಗ್ಗ ನಗರದಲ್ಲಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್, ಪೂರ್ವ ಮತ್ತು ಪಶ್ಚಿಮ ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಮಂಗಳವಾರ ಸಭೆ ನಡೆಸಿದರು.
ಸಂಚಾರಿ ಪೊಲೀಸ್ ಸಿಬ್ಬಂದಿ ನಿರ್ವಹಿಸಬೇಕಾದ ಕರ್ತವ್ಯ ಮತ್ತು ನಗರ ವ್ಯಾಪ್ತಿಯಲ್ಲಿ ಸಿಟಿ ಬಸ್ ನಿಲುಗಡೆ, ‘ಭಾರೀ ವಾಹನ ಸಂಚಾರಕ್ಕೆ ಸಮಯ ನಿಗದಿ ಪಡಿಸಿ ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ಗಮನ ಹರಿಸುವಂತೆ ಸೂಚನೆ ನೀಡಿದರು. ಜೊತೆಗೆ ಬಿಹೆಚ್ ರಸ್ತೆಯಲ್ಲಿ ಶಾಲಾ-ಕಾಲೇಜುಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಬೆಳಿಗ್ಗೆ 08 ರಿಂದ 10.30 ಹಾಗೂ ಸಂಜೆ 04 ರಿಂದ 06 ಗಂಟೆಯವರೆಗೆ ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚನೆಗಳನ್ನು ನೀಡಿದರು.
ಶಿವಮೊಗ್ಗ ಉಪವಿಭಾಗದ ಡಿವೈಎಸ್ಪಿ ಬಾಲರಾಜ್, ಟ್ರಾಫಿಕ್ ಇನ್ಸ್ಪೆಕ್ಟರ್ ಸಂತೋಷ್ಕುಮಾರ್ ಮತ್ತು ಸಿಬ್ಬಂದಿ ಹಾಜರಿದ್ದರು.