ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸುಪ್ರೀಂಕೋರ್ಟ್ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪರವರು ಆಮ್ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು.
ಬೆಂಗಳೂರಿನ ಹೊಟೇಲ್ ಪರಾಗ್ನಲ್ಲಿ ನಡೆದ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಎಎಪಿಯ ಕರ್ನಾಟಕ ಉಸ್ತುವಾರಿ ದಿಲೀಪ್ ಪಾಂಡೆರವರು ಬ್ರಿಜೇಶ್ ಕಾಳಪ್ಪರವರನ್ನುಪಕ್ಷಕ್ಕೆ ಬರಮಾಡಿಕೊಂಡರು.
ಆಮ್ ಆದ್ಮಿ ಪಾರ್ಟಿ ಸೇರಿ ಮಾತನಾಡಿದ ಬ್ರಿಜೇಶ್ ಕಾಳಪ್ಪ, ‘ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರವು ಹೊಸಹೊಸ ಜನಪರ ಯೋಜನೆಗಳನ್ನು ನಿರಂತರವಾಗಿ ಜಾರಿಗೆ ತರುತ್ತಿದೆ. ಗುಣಮಟ್ಟ ಆಡಳಿತ ಹೇಗಿರುತ್ತದೆ ಎಂಬುದನ್ನು ದೇಶಕ್ಕೆ ತೋರಿಸಿಕೊಡುತ್ತಿದೆ. ಜನಸಾಮಾನ್ಯರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದೇ ದುರಾಡಳಿತ ನೀಡುತ್ತಿರುವ ಬಿಜೆಪಿಗೆ ಸಡ್ಡು ಹೊಡೆಯುವ ಸಾಮರ್ಥ್ಯವು ಆಮ್ ಆದ್ಮಿ ಪಾರ್ಟಿಗಿದೆ. ಮುಂಬರುವ ವಿವಿಧ ಚುನಾವಣೆಗಳಲ್ಲಿ ಎಎಪಿ ಜಯಗಳಿಸಿ ಅಧಿಕಾರ ಹಿಡಿದರೆ ಮಾತ್ರ ದೇಶದ ಭವಿಷ್ಯ ಬಲಗೊಳ್ಳಲಿದೆ’ ಎಂದು ಹೇಳಿದರು.
ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಪಕ್ಷದ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಮಾಜಿ ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಪಕ್ಷದ ಮಾಧ್ಯಮ ವಕ್ತಾರ ಕೆ. ಮಥಾಯಿ, ಪಕ್ಷದ ಮುಖಂಡರಾದ ಮೋಹನ್ ದಾಸರಿ, ಸಂಚಿತ್ ಸಹವಾನಿ, ಜಗದೀಶ್ ವಿ ಸದಂ, ಕುಶಲಸ್ವಾಮಿ,ಚನ್ನಪ್ಪಗೌಡ ನಲ್ಲೂರು , ಸುರೇಶ್ ರಾಥೋಡ್ ,ದರ್ಶನ್ ಜೈನ್ ಮತ್ತಿತರ ನಾಯಕರು, ಕಾರ್ಯಕರ್ತರು ಹಾಗೂ ಬ್ರಿಜೇಶ್ ಕಾಳಪ್ಪರವರ ಅನೇಕ ಬೆಂಬಲಿಗರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.