ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ಮೋದಿ ಸರಕಾರವನ್ನು ಸೋಲಿಸಿ ಅಧಿಕಾರಕ್ಕೇರಲು ವಿಪಕ್ಷಗಳ I.N.D.I.A ಮೈತ್ರಿಕೂಟ ರಣತಂತ್ರ ರೂಪಿಸುತ್ತಿದ್ದು, ಇದರ ನಡುವೆ ಒಕ್ಕೂಟದ ಭಾಗವಾಗಿರುವ ಲಾಲೂ ಪ್ರಸಾದ್ ಯಾದವ್ ಅವರ ಕುಟುಂಬಕ್ಕೆ ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.
ಮಾಜಿ ಮುಖ್ಯಮಂತ್ರಿಗಳಾದ ಲಾಲೂ ಪ್ರಸಾದ್ ಯಾದವ್ ಮತ್ತು ರಾಬ್ಡಿ ದೇವಿ ಹಾಗೂ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೇರಿದಂತೆ ಹಲವರ ವಿರುದ್ಧ ಉದ್ಯೋಗಕ್ಕಾಗಿ ಭೂಮಿ ಹಗರಣ ಎಂದು ಕರೆಯಲ್ಪಡುವ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಯುತ್ತಿದೆ. ಹಣಕಾಸು ಅಪರಾಧಗಳ ತನಿಖೆ ನಡೆಸುವ ಕೇಂದ್ರ ಸಂಸ್ಥೆಯಾದ ಜಾರಿ ನಿರ್ದೇಶನಾಲಯ ಅಥವಾ ಇ.ಡಿ 6 ಕೋಟಿ ರೂ. ಆಸ್ತಿಯನ್ನು ವಶಪಡಿಸಿಕೊಂಡಿದೆ.
2004 ರಿಂದ 2009 ರವರೆಗೆ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಲಾಲೂ ಪ್ರಸಾದ್ ಮತ್ತು ಅವರ ಕುಟುಂಬ ಸದಸ್ಯರು ಹಲವರಿಗೆ ಉದ್ಯೋಗ ಕೊಡಿಸುವ ಆಮಿಷ ತೋರಿಸಿ ಭೂಮಿಯನ್ನು ಅಗ್ಗವಾಗಿ ಖರೀದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೂ ಮುನ್ನ, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಜುಲೈ 3 ರಂದು ಲಾಲೂ ಪ್ರಸಾದ್, ಅವರ ಪತ್ನಿ ಮತ್ತು ಪುತ್ರ ತೇಜಸ್ವಿ ಯಾದವ್ ವಿರುದ್ಧ ಆರೋಪಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಿತ್ತು.