ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ದುರಂತ ಸಂಭವಿಸಿದೆ. ಭಾರೀ ಮಳೆಗೆ ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.
ಗಂಗೋನಹಳ್ಳಿಯ ನಿವಾಸಿ ಶಿವಬೋರಯ್ಯ (55) ಎಂಬುವರು ಮೃತಪಟ್ಟ ವ್ಯಕ್ತಿ .
ಚಾಲಕನ ಮೇಲೆ ಬಿದ್ದ ಕಾಂಪೌಂಡ್ ಗೋಡೆ
ನಗರದಲ್ಲಿ ಇಂದು ಸಂಜೆಯಾಗುತ್ತಿದ್ದಂತೆ ಮಳೆ ಅಬ್ಬರ ಶುರುವಾಗಿತ್ತು. ಧಾರಾಕಾರ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿದ್ದವು. ಇತ್ತ ವಿಜಯನಗರದ ಕಾಂಪೌಂಡ್ ಗೋಡೆಯೊಂದು ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಈ ವೇಳೆ ಅಲ್ಲೇ ಇದ್ದ ಆಟೋ ಚಾಲಕನ ಮೇಲೆ ಗೋಡೆ ಬಿದ್ದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮತ್ತೆ ನೆನಪು ತಂದ ಬೌರಿಂಗ್ ಆಸ್ಪತ್ರೆ ಘಟನೆ
ಕಳೆದ ಕೆಲ ದಿನಗಳ ಹಿಂದೆ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಇಂಥದ್ದೇ ಮತ್ತೊಂದು ದುರಂತ ಸಂಭವಿಸಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.



