ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಯರ್ ಸ್ಫೋಟಗೊಂಡ ಪರಿಣಾಮ ಪೊಲೀಸ್ ಜೀಪ್ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ದನ್ ಸಾವನ್ನಪ್ಪಿದಘಟನೆ ಹಾಸನದಲ್ಲಿ ನಡೆದಿದೆ.
ಮೃತ ಅಧಿಕಾರಿಯನ್ನು ಮಧ್ಯಪ್ರದೇಶ ಮೂಲದವರು. ಮೈಸೂರಿನ ಕೆಪಿಎನಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.
ಹರ್ಷಬರ್ದನ್ ಅವರು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದರು. ಇಂದು (ಭಾನುವಾರ) ಸಂಜೆ ವರದಿ ಮಾಡಿಕೊಳ್ಳಲು ಹೊಳೆನರಸೀಪುರ ಕಡೆಯಿಂದ ಜೀಪ್ನಲ್ಲಿ ಹಾಸನ ನಗರಕ್ಕೆ ಬರುತ್ತಿದ್ದರು. ಇನ್ನೇನು ಕೆಲವೇ ನಿಮಿಷಗಳಲ್ಲಿ ಹಾಸನ ತಲುಪಬೇಕು ಎನ್ನುವಷ್ಟರಲ್ಲಿ ಕಿತ್ತಾನೆಗಡಿ ಬಳಿ ಜೀಪ್ನ ಟಯರ್ ಸ್ಫೋಟಗೊಂಡಿದೆ. ಈ ವೇಳೆ ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು. ಅಪಘಾತದಲ್ಲಿ ಚಾಲಕ ಮಂಜೇಗೌಡ ಎಂಬವರಿಗೂ ಗಾಯಗಳಾಗಿವೆ.
ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಧಿಕಾರಿ ಮತ್ತು ಚಾಲಕನನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.