ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ನಡೆದ ಫೈರಿಂಗ್ ಪ್ರಕರಣದಲ್ಲಿ ಶೂಟರ್ಗಳಿಗೆ ಶಸ್ತ್ರಾಸ್ತ್ರಗಳನ್ನು ಒದಗಿಸಿದ ಆರೋಪಿ ಇಂದು(ಮೇ 1) ಮುಂಬೈ ಪೊಲೀಸ್ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆರೋಪಿ ಅನುಜ್ ಥಾಪನ್ ನನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದರು.
ಈ ಹಿಂದೆ ಮುಂಬೈ ಪೊಲೀಸರು, ಪ್ರಕರಣದಲ್ಲಿ ಬಂಧಿತ ಆರೋಪಿ ಅನುಜ್ ಥಾಪನ್ ಕಸ್ಟಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹೇಳಿದ್ದರು. ಆದರೀಗ ಆತ ಮೃತಪಟ್ಟಿದ್ದಾನೆ ಎಂದು ಪೋಲೀಸರು ತಿಳಿಸಿದ್ದಾರೆ.
ನಟ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಂಧಿಸಲಾದ ಮೂವರು ಆರೋಪಿಗಳನ್ನು ಮೇ 8ರವರೆಗೆ ವಿಶೇಷ ನ್ಯಾಯಾಲಯವು ಸೋಮವಾರವಷ್ಟೇ ಪೋಲೀಸ್ ಕಸ್ಟಡಿಗೆ ನೀಡಿತ್ತು. ಅದಾಗಿ ಎರಡು ದಿನಗಳಲ್ಲಿ ಈ ಘಟನೆ ನಡೆದಿದೆ.
ಏ.29ರ ವಿಚಾರಣೆಯಲ್ಲಿ ವಿಶೇಷ ಎಂಸಿಒಸಿಎ ನ್ಯಾಯಾಧೀಶ ಎ ಎಂ ಪಾಟೀಲ್ ಅವರು ವಿಕ್ಕಿ ಗುಪ್ತಾ (24), ಸಾಗರ್ ಪಾಲ್ (21), ಮತ್ತು ಅನುಜ್ ಥಾಪನ್ (32) ಅವರನ್ನು ಪೊಲೀಸ್ ಕಸ್ಟಡಿಗೆ ಮತ್ತು ಸೋನು ಚಂದರ್ ಬಿಷ್ಣೋಯ್ (37) ಅವರನ್ನು ವೈದ್ಯಕೀಯ ಕಾರಣಗಳಿಗಾಗಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.