February 16, 2026
Monday, February 16, 2026
spot_img

Shocking | ರಂಗ ಕಲಾವಿದ, ಹಾಸ್ಯ ನಟ ರಾಜು ತಾಳಿಕೋಟೆ ವಿಧಿವಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ರಂಗ ಕಲಾವಿದ ಮತ್ತು ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು.

ಹೃದಯಾಘಾದಿಂದ ಭಾನುವಾರ ಮಣಿಪಾಲ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ವೈದ್ಯರ ನಿರಂತರ ಚಿಕಿತ್ಸೆ ನಂತರವೂ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.

ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ ಎಂದಾಗಿತ್ತು. ಅವರು ಕೇವಲ ನಟನಾಗಿರದೆ, ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದರು. ಅವರ ಜೀವನದ ಬಹುಪಾಲು ಸಮಯವನ್ನು ಅವರು ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನು ರಂಜಿಸುವುದರಲ್ಲಿಯೇ ಕಳೆದಿದ್ದರು.

ರಾಜು ತಾಳಿಕೋಟಿಯವರು ಉತ್ತರ ಕರ್ನಾಟಕದ ಶೈಲಿಯ ಭಾಷೆ ಮತ್ತು ಉಡುಗೆ-ತೊಡುಗೆಯೊಂದಿಗೆ ಹಾಸ್ಯ ಮತ್ತು ಬೋಧಪ್ರದ ಪಾತ್ರಗಳನ್ನು ಮಾಡುತ್ತಿದ್ದರಿಂದ ಅಪಾರ ಜನಪ್ರಿಯತೆ ಗಳಿಸಿದ್ದರು. ಅದರಲ್ಲೂ ವಿಶೇಷವಾಗಿ, ಕುಡುಕನ ಪಾತ್ರಗಳಲ್ಲಿ ಅವರ ಅಭಿನಯ ಅತ್ಯಂತ ಲೀಲಾಜಾಲವಾಗಿರುತ್ತಿತ್ತು. ‘ಕಲಿಯುಗದ ಕುಡುಕ’, ‘ಕುಡುಕರ ಸಾಮ್ರಾಜ್ಯ’, ಮತ್ತು ‘ಅಸಲಿ ಕುಡುಕ’ ಅವರ ಪ್ರಖ್ಯಾತ ನಾಟಕಗಳಾಗಿದ್ದು, ಈ ನಾಟಕಗಳ ಆಡಿಯೊ ಕ್ಯಾಸೆಟ್‌ಗಳು ಕೂಡ ಆ ಕಾಲದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮನೆಮಾತಾಗಿದ್ದವು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !