ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ನಿರ್ಗಮಿಸುವ ಸುಳಿವು ನೀಡಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮೇ 28ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದ ವೇಳೆ ತಾವು ಸಕ್ರಿಯ ರಾಜಕಾರಣದಲ್ಲೇ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದರು. ಆದರೆ, ಈಗ 2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸುವ ಮೂಲಕ, ಬ್ಯಾಲಟ್ ಸಮರದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಈ ಹಠಾತ್ ಬೆಳವಣಿಗೆಯು ಅವರ ಅಪಾರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಆಪ್ತ ವಲಯದಲ್ಲಿ ತೀವ್ರ ಬೇಸರ ಮತ್ತು ಆತಂಕವನ್ನು ಸೃಷ್ಟಿಸಿದೆ.
‘ಮಾರ್ಗದರ್ಶಕರೇ ಇಲ್ಲದಂತಾಗುತ್ತದೆ’ – ಶಾಸಕ ರಾಯರೆಡ್ಡಿ ಕಳವಳ
ಸಿದ್ದರಾಮಯ್ಯ ಅವರ ಈ ನಿವೃತ್ತಿಯ ನಿರ್ಧಾರಕ್ಕೆ ಶಾಸಕ ಬಸವರಾಜ ರಾಯರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಐಎಬಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯಲಬುರ್ಗಾ ಶಾಸಕರು, ಮಾಧ್ಯಮಗಳ ಮೂಲಕ ಈ ವಿಚಾರ ತಿಳಿದುಬಂದಿದ್ದು, ಅವರು ಯಾವುದೇ ಕಾರಣಕ್ಕೂ ನಿವೃತ್ತರಾಗಬಾರದು ಎಂದು ಆಗ್ರಹಿಸಿದರು.
“ಸಿದ್ದರಾಮಯ್ಯನವರು ರಾಜಕೀಯದಿಂದ ಹಿಂದೆ ಸರಿದರೆ, ಮುಂದಿನ ಪೀಳಿಗೆಗೆ ಸೂಕ್ತ ಮಾರ್ಗದರ್ಶನ ನೀಡುವ ಅನುಭವಿ ನಾಯಕರೇ ಇಲ್ಲದಂತಾಗುತ್ತದೆ. ಆದ್ದರಿಂದ ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಿ, 2028ರ ಚುನಾವಣೆಯಲ್ಲೂ ಸ್ಪರ್ಧಿಸಬೇಕು,” ಎಂದು ರಾಯರೆಡ್ಡಿ ಮನವಿ ಮಾಡಿದ್ದಾರೆ.



