ಆರೆಸ್ಸೆಸ್ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯರಿಗೆ ಇಲ್ಲ: ನಳಿನ್

ಹೊಸದಿಗಂತ ವರದಿ,ಮಂಗಳೂರು:

ದೇಶ ಕಟ್ಟುವ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಮಾತನಾಡುವ ನೈತಿಕತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಇಲ್ಲ. ಮೊದಲು ಅವರು ತಮಗೆ ತೋಚಿದಂತೆ ಮಾತನಾಡುವುದನ್ನು ನಿಲ್ಲಿಸಲಿ ಎಂದು ದ.ಕ. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಮತ್ತೆ ಅಧಿಕಾರದ ಆಸೆ ಶುರುವಾಗಿದೆ. ಹೇಗಾದರೂ ಅಧಿಕಾರ ಪಡೆಯಬೇಕೆಂಬ ಲಾಲಸೆಯಿಂದ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ದೇಶ ಸ್ವಾತಂತ್ರ್ಯಗೊಂಡ ನಂತರ ನೆಹರೂ ಸಂತಾನ ದೇಶವನ್ನು ಮಾರಿದರೆ, ಆರೆಸ್ಸೆಸ್ ದೇಶವನ್ನು ಉದ್ಧರಿಸಿದೆ. ಇದನ್ನು ಸಿದ್ದರಾಮಯ್ಯ ತಿಳಿದುಕೊಳ್ಳಲಿ ಎಂದು ಕಿಡಿಕಾರಿದರು.
ಅಧಿಕಾರ ವಂಚಿತ ಸಿದ್ದರಾಮಯ್ಯಗೆ ಮತಿಭ್ರಮಣೆ ಆಗಿದೆ. ಅಧಿಕಾರದ ಹುಚ್ಚಿನಲ್ಲಿ ಇತಿಹಾಸ, ಭಾರತೀಯತೆ ಎಲ್ಲವನ್ನೂ ಮರೆತಿದ್ದಾರೆ. ಸಮಾಜವಾದದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ, ಓಟ್‌ಬ್ಯಾಂಕ್ ರಾಜಕಾರಣಕ್ಕಾಗಿ ಸಮಾಜವನ್ನು ಒಡೆಯುವ, ಜಾತಿ ಸಂಘರ್ಷ, ಗಲಭೆ ಸೃಷ್ಟಿಸುವ ಮನಸ್ಸುಗಳೊಂದಿಗೆ ಕೈ ಜೋಡಿಸುತ್ತಿದ್ದಾರೆ. ಇದು ಓರ್ವ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿಗೆ ಶೋಭೆ ತರುವಂತದ್ದಲ್ಲ ಎಂದು ನಳಿನ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!