ಹೊಸದಿಗಂತ ಡಿಜಿಟಲ್ ಡೆಸ್ಕ್:
2023 ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳು ಅರ್ಜಿ ಸಲ್ಲಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದು, ಇಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು.
ಇದೀಗ ಅಂತಿಮ ದಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರ ಆಯ್ಕೆಯನ್ನು ಹೈಕಮಾಂಡ್ಗೆ ಬಿಟ್ಟು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ನವೆಂಬರ್ 5 ರಿಂದ 15 ರವರೆಗೆ ನೀಡಿದ ಕಾಲಾವಕಾಶ ನಂತರ ನವೆಂಬರ್ 21ಕ್ಕೆ ವಿಸ್ತರಣೆಯಾಗಿತ್ತು. ಅರ್ಜಿ ಸಲ್ಲಿಕೆಗೆ ಇಂದು ಕಡೆಯ ದಿನವಾಗಿದ್ದು, ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಹೆಚ್ಚಾಗಿತ್ತು.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕನಕಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಅಂತಿಮವಾಗಿ ಇಂದು ಸಿದ್ದರಾಮಯ್ಯ ತಮ್ಮ ಸ್ಪರ್ಧೆಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಕ್ಷೇತ್ರ ಆಯ್ಕೆ ಮಾಡಿಕೊಳ್ಳದೇ ತಮ್ಮ ಕ್ಷೇತ್ರವನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಅರ್ಜಿ ಸಲ್ಲಿಸಿದ್ದಾರೆ.