ಹೊಸದಿಗಂತ ವರದಿ, ರಾಮನಗರ:
ಇಂದಿನಿಂದ ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭಗೊಂಡಿದೆ. ನಗಾರಿ ಬಾರಿಸೋ ಮೂಲಕ ಆರಂಭಗೊಂಡಿರುವಂತ ಮೇಕೆದಾಟು ಪಾದಯಾತ್ರೆ ಹೆಗ್ಗನೂರು ತಲುಪಿದೆ. ಇದೇ ಸಂದರ್ಭದಲ್ಲಿ ಪಾದಯಾತ್ರೆಯಲ್ಲಿ ತೊಡಗಿರುವಂತ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿರೋದಾಗಿ ತಿಳಿದು ಬಂದಿದೆ.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ಪಾದಯಾತ್ರೆ ಹೆಗ್ಗನೂರು ತಲುಪಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಹೆಗ್ಗನೂರಿನಲ್ಲಿ ವೈದ್ಯರಿಂದ ಪರೀಕ್ಷೆಗೆ ಒಳಪಟ್ಟರು.
ಪರೀಕ್ಷೆ ನಡೆಸಿದ ವೈದ್ಯರು ಪಾದಯಾತ್ರೆಯನ್ನು ಬಿಸಿಲಿನಲ್ಲಿಯೂ ನಡೆಸಿದ್ದರಿಂದ ಜ್ವರ ಬಂದಿರಬಹುದು ಎಂಬುದಾಗಿ ತಿಳಿಸಿದ್ದಾರೆ. ವಿಶ್ರಾಂತಿ ತೆಗೆದುಕೊಳ್ಳೋದಕ್ಕೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದೇ ಕಾರಣದಿಂದಾಗಿ ಪಾದಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ.