ಪಿಎಫ್‌ಐ ಬ್ಯಾನ್ ಆಗಿದ್ದಕ್ಕೆ ಸಿದ್ದರಾಮಯ್ಯ ಮನಸ್ಸಿನಲ್ಲಿ ನೋವಿದೆ: ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯ

ಹೊಸದಿಗಂತ ವರದಿ, ಹುಬ್ಬಳ್ಳಿ:
ಕೇಂದ್ರ ಸರ್ಕಾರ ಪಿಎಫ್‌ಐ ಬ್ಯಾನ್ ಮಾಡಿರುವ ವಿಚಾರ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ಮನಸ್ಸಿನಲ್ಲಿ ಕುದಿಯುತ್ತಿದ್ದು, ಅವರಿಗೆ ಈ ಕುರಿತು ನೇರವಾಗಿ ವಿರೋಧ ವ್ಯಕ್ತಪಡಿಸಲಾಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಹಿಂದೆ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಪಿಎಫ್‌ಐ ಕಾರ್ಯಕರ್ತರ ಮೇಲಿರುವ ಪ್ರಕರಣಗಳನ್ನು ಓಟ್ ಬ್ಯಾಂಕ್‌ಗಾಗಿ ವಾಪಸ್‌ ಪಡೆಯಲಾಗಿತ್ತು. ಈಗ ನೇರವಾಗಿ ಬಿಜೆಪಿ ನಿಲುವನ್ನು ವಿರೋಧಿಸಲಾಗದೆ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಲು ಹೇಳುತ್ತಿದ್ದಾರೆ. ಈ ವಿಚಾರದಿಂದಲೇ ಸಿದ್ದರಾಮಯ್ಯ ಅವರಿಗೆ ಪಿಎಫ್‌ಐ ಮೇಲೆ ಎಷ್ಟು ಪ್ರೀತಿ ಇದೆ ಎಂಬುದು ತಿಳಿಯುತ್ತದೆ ಎಂದು ವ್ಯಂಗ್ಯವಾಡಿದರು.
ಬಿಜೆಪಿ ಯಾವುದೇ ಜನಾಂಗ, ಓಟ್ ಬ್ಯಾಂಕ್ ಎಂಬುದನ್ನು ನೋಡುವುದಿಲ್ಲ. ದೇಶದಲ್ಲಿರುವ ಎಲ್ಲ ಅಲ್ಪಸಂಖ್ಯಾತರು ಕೆಟ್ಟವರು ಎಂದು ಭಾವಿಸಿಲ್ಲ. ದೇಶ ವಿರೋ ಚಟುವಟಿಕೆಯಲ್ಲಿ ತೊಡಗಿದವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಿದ್ದರಾಮಯ್ಯ ಈ ವಿಚಾರವಾಗಿ ರಾಜಕೀಯ ಮಾಡುತ್ತಿದ್ದು, ಓಟ್ ಬ್ಯಾಂಕ್‌ಗಾಗಿ ಆರ್‌ಎಸ್‌ಎಸ್ ಬಗ್ಗೆ ಮಾತನಾಡುತ್ತಿದ್ದಾರೆ. ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿರುವುದನ್ನು ವಿರೋಧಿಸಿದರೆ ಎಲ್ಲಿ ಜನ ಒದೆಯುತ್ತಾರೆ ಎಂದು ಆರ್‌ಎಸ್‌ಎಸ್ ಬ್ಯಾನ್ ಮಾಡಿ ಅಂತಿದ್ದಾರೆ ಎಂದು ಹೇಳಿದರು.
ಎಸ್‌ಡಿಪಿಐ ರಾಜಕೀಯ ಪಕ್ಷವಾಗಿದ್ದು, ಕ್ರಮ ತೆಗೆದುಕೊಳ್ಳಲು ಹಲವಾರು ಕಾಯ್ದೆಗಳಿವೆ. ಕಾಂಗ್ರೆಸ್ ಎಲ್ಲ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಆದರೆ ಬಿಜೆಪಿ ಹಾಗೇ ಮಾಡಲ್ಲ. ದೇಶ ವಿರೋ ಕಾರ್ಯದಲ್ಲಿ ಯಾರೇ ಭಾಗವಹಿಸಿದರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!