ಮರೆಯಾಯಿತು ಸಿದ್ದೇಶ್ವರ ಸ್ವಾಮೀಜಿ ಎಂಬ ಜಗತ್ತಿನ ಸ್ಫೂರ್ತಿಯ ಬೆಳಕು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಡೆದಾಡುವ ದೇವರು, ಜ್ಞಾನದ ನಿಧಿ ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನವೇ ಒಂದು ಸಂದೇಶವಾಗಿದೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ 1941 ಅಕ್ಟೋಬರ್ 24ರಂದು ಜನಿಸಿದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಬಾಲ್ಯದ ಹೆಸರು ಸಿದ್ದಗೊಂಡಪ್ಪ.

ಬಾಲ್ಯದ ಶಿಕ್ಷಣ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ನಾಲ್ಕನೇ ತರಗತಿಯವರೆಗೆ ಓದಿದರು . ಈ ವೇಳೆ ಜ್ಞಾನಯೋಗಾಶ್ರಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಹಳ್ಳಿ ಹಳ್ಳಿ ಸುತ್ತಿ ಪ್ರವಚನದ ಮೂಲಕ ಜನರಲ್ಲಿ ಜ್ಞಾನವನ್ನು ಬಿತ್ತಿ, ಶಿಕ್ಷಣದ ಕುರಿತು ಅರಿವು ಮೂಡಿಸುತ್ತಿದ್ದರು. ಈ ಕ್ಷಣ ಗ್ರಾಮೀಣ ಪ್ರದೇಶದ ಮಕ್ಕಳು ವಿದ್ಯೆಗಾಗಿ ಕಷ್ಟಪಡುತ್ತಿದ್ದುದನ್ನು ಗಮನಿಸಿ ಅವರಿಗಾಗಿ ವಿದ್ಯಾಸಂಸ್ಥೆಗಳನ್ನು ಪ್ರಾರಂಭಿಸಿದರಲ್ಲದೆ, ಅವರಿಗೆ ಊಟ, ವಸತಿಗಳಿಗೆ ವ್ಯವಸ್ಥೆ ಮಾಡಿದರು. ಹಾಗೆ ವಿದ್ಯೆ ಕಲಿಯಲು ಬಂದ ಸಾವಿರಾರು ಮಕ್ಕಳಲ್ಲಿ ಸಿದ್ದಗೊಂಡಪ್ಪ ಕೂಡ ಒಬ್ಬರು.

14ನೇ ವಯಸ್ಸಿನಲ್ಲಿ ಬಾಲಕ ಸಿದ್ಧೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರುತ್ತಿದ್ದಂತೆ ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ಧೇಶ್ವರರನ್ನು ಕರೆದೊಯ್ಯ ತೊಡಗಿದರು. ಜತೆ ಜತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದರು.

ಎಂ.ಎ. ಪದವಿಯ ಅಭ್ಯಾಸದ ಸಮಯದಲ್ಲಿ ಶ್ರೀ ಸಿದ್ದೇಶ್ವರರರು ಕೊಲ್ಹಾಪುರದಲ್ಲಿ ವಿಜಯ ಪಾಟೀಲರ ಮನೆಯಲ್ಲಿ ವಾಸವಿದ್ದರು. ಆ ಅವಧಿಯಲ್ಲಿಯೇ ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ ‘ಸಿದ್ಧಾಂತ ಶಿಖಾಮಣಿ’ ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು.

ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳಿಗೆ ಸಿದ್ಧೇಶ್ವರನ ಅಂದರೆ ಬಲು ಪ್ರೀತಿ. ಆತ ಮಹಾ ಬುದ್ಧಿವಂತ, ಆಧ್ಯಾತ್ಮಿಕದಂತೆ ಲೌಕಿಕ ವಿಷಯಗಳಲ್ಲೂ ವಿಶೇಷ ಪರಿಜ್ಞಾನವಿದೆ. ಮುಂದೆ ಜಗತ್ತಿಗೇ ದೊಡ್ಡವನಾಗುತ್ತಾನೆ ಎಂದು ವಿಶ್ವಾಸದಿಂದ ಎಲ್ಲರೆದುರು ಹೇಳುತ್ತಿದ್ದರು.

ಮುಂದೆ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಲಿಂಗೈಕ್ಯರಾದ ನಂತರ ಸಿದ್ದಗೊಂಡಪ್ಪ ಶ್ರೀ ಸಿದ್ದೇಶ್ವರ ಸ್ವಾಮೀಜಿಯಾಗಿ ಆಶ್ರಮವನ್ನು ಮುನ್ನಡೆಸಲಾರಂಭಿಸಿದರು. ಅವರಂತೆಯೇ ಪ್ರವಚನ ಮುಂದುವರಿಸಿದರು. ಗುರುಗಳು ಸ್ಥಾಪಿಸಿದ ನೂರಾರು ವಿದ್ಯಾ ಸಂಸ್ಥೆಗಳನ್ನು ಮುಂದುವರಿಸಿಕೊಂಡು ಬಂದಿದ್ದರು.

ಜ್ಞಾನಯೋಗಾಶ್ರಮದಲ್ಲಿ ಜ್ಞಾನದಾಸೋಹ ಮಾಡುತ್ತಾ ಆಧ್ಯಾತ್ಮಿಕತೆಯನ್ನೇ ಉಸಿರಾಗಿಸಿಕೊಂಡ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸದಾ ಅಳವಾದ ಅಧ್ಯಯನ ಚಿಂತನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಶ್ರೇಷ್ಠ ಅನುಭಾವಿಗಳೂ ಆಗಿದ್ದ ಅವರಿಗೆ ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ಪ್ರವಚನ ನೀಡುವುದು ಅಭ್ಯಾಸವಾಗಿತ್ತು.

ಸರಳವಾದ ಪದಗಳ ಬಳಕೆಯೊಂದಿಗೆ ವಚನಗಳನ್ನು, ಸುಭಾಷಿತ, ನೀತಿಕತೆಗಳನ್ನು ಪ್ರಸ್ತುತ ಸಮಾಜದಲ್ಲಿನ ವಾಸ್ತವ ಸಂಗತಿಗಳಿಗೆ ಹೋಲಿಸಿ ಅವರು ನೀಡುತ್ತಿದ್ದ ಪ್ರವಚನ ಧಾರ್ಮಿಕ, ಆಧ್ಯಾತ್ಮಿಕ, ಸದ್ಗುಣ, ಸಂಸ್ಕೃತಿ, ಸಂಪ್ರದಾಯ, ಆಚಾರ, ವಿಚಾರ, ನಾಡು, ನುಡಿ, ನೆಲ, ಜಲ, ದೇಶ, ಭಾಷೆ ರಾಷ್ಟ್ರ ಪ್ರೇಮ, ಪರೋಪಕಾರ ಮತ್ತು ಮಾನವೀಯ ಮೌಲ್ಯಗಳ ಕುರಿತು ವಿಶೇಷವಾಗಿ ಉಪನ್ಯಾಸ ನೀಡುತ್ತಿದ್ದರು. ಇವರ ಮಾತುಗಳು ಅನೇಕರ ಜೀವನ ಬದಲಿಸಿವೆ, ಜೀವನೋತ್ಸಾಹ ತುಂಬಿವೆ.

ಪತ್ರಿಕೆಗಳಲ್ಲಿ ಅಂಕಣ ಬರೆಯುತ್ತಿದ್ದ ಶ್ರೀಗಳು ‘ಭೂಮಿಯ ಮೇಲೆ ಮನುಷ್ಯ ಒಬ್ಬನೇ ಬುದ್ಧಿಜೀವಿ, ಸಂಘಜೀವಿಯಾಗಿದ್ದಾನೆ. ಆದ್ದರಿಂದ ಮನುಷ್ಯ ಸಮಾಜದಲ್ಲಿ ಹೃದಯವಂತಿಕೆಯಿಂದ ಬಾಳಿ ಬದುಕಬೇಕು. ಅಲ್ಲದೇ ಉಳಿದ ಇತರರಿಗೆ ಕೇಡನ್ನು ಬಯಸದೆ ಸಂತೋಷ ನೀಡುವ ಗುಣ ಬೆಳೆಸಿಕೊಳ್ಳಬೇಕುʼʼ ಎನ್ನುತ್ತಿದ್ದರು. ಅವರ ಪ್ರವಚನಗಳನ್ನು ಸಂಗ್ರಹಿಸಿ ಜ್ಞಾನಯೋಗಾಶ್ರಮವೇ ಹಲವಾರು ಕೃತಿಗಳನ್ನು ಹೊರತಂದಿದೆ.

ಪ್ರಶಸ್ತಿ, ಪುರಸ್ಕಾರಗಳನ್ನು ತಿರಸ್ಕರಿಸಿದ್ದ ಶ್ರೀಗಳು
ಭಾರತ ಸರಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ಪ್ರಶಸ್ತಿ ಸಿದ್ದೇಶ್ವರ ಸ್ವಾಮೀಜಿಯವರಿಗೆ ಒಲಿದುಬಂದಿತ್ತು. ಆದರೆ ಎಲ್ಲ ಗೌರವಾಧರಗಳೊಂದಿಗೆ ಈ ಪ್ರಶಸ್ತಿಯನ್ನು ಹಿಂದಿರುಗಿಸಿದರು. ನಾನೊಬ್ಬ ಸರಳ ವ್ಯಕ್ತಿ. ಸಾಮಾನ್ಯ ಜೀವನ ನಡೆಸುತ್ತ, ಆಧ್ಯಾತ್ಮಿಕ ಬೋಧನೆಯ ಮೂಲಕ ಜನರ ಜೀವನ ಉದಾತ್ತಗೊಳಿಸುವುದು ಉದ್ದೇಶ ನನ್ನದು. ಹಾಗಾಗಿ ಪ್ರಶಸ್ತಿಗಳ ಅವಶ್ಯತೆಯು ನನಗಿಲ್ಲ. ಅನ್ಯಥಾ ಭಾವಿಸದಿರಿ ಎಂದು ಹೇಳಿದ್ದರು. ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿತ್ತು. ಅದನ್ನೂ ಶ್ರೀಗಳು ಸ್ವೀಕರಿಸಿರಲಿಲ್ಲ. ಹೀಗೆ ತಮಗೆ ಸಂದ ಎಷ್ಟೋ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ಅವರು ವಿನಮೃವಾಗಿಯೇ ನಿರಾಕರಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!