ಹೊಸದಿಗಂತ ವರದಿ ಮಂಗಳೂರು:
ಮಂಗಳೂರು ಸಮೀಪದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಆರು ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಕಟ್ಟಡ ನಿರ್ಮಾಣ ಕಾಮಗಾರಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಬಾಂಗ್ಲಾ ಪ್ರಜೆಗಳು ಸುರತ್ಕಲ್ ವ್ಯಾಪ್ತಿಯಲ್ಲೇ ನೆಲೆಸಿದ್ದರು. ಪತ್ತೆಯಾದ ಆರು ಮಂದಿಯ ವಿವರಗಳನ್ನು ಮುಂದಿನ ಕ್ರಮಕ್ಕಾಗಿ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ(ಎಫ್ಆರ್ಆರ್ಒ) ಕಳುಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ ಅಧಿಕಾರಿಗಳು ಪ್ರಕರಣವನ್ನು ಪರಿಶೀಲಿಸಿ ಸಂಬಂಧಪಟ್ಟವರನ್ನು ವಶಕ್ಕೆ ಪಡೆಯುವ ಕುರಿತು ಆದೇಶ ಹೊರಡಿಸಲಿದ್ದು, ನಂತರ ಅವರನ್ನು ಭಾರತದಿಂದ ಗಡಿಪಾರು ಮಾಡುವ ಸಂಬಂಧ ಕಾನೂನುಬದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದವರು ತಿಳಿಸಿದ್ದಾರೆ.



