March 30, 2026
Monday, March 30, 2026
spot_img

ಮೋದಿ ವಿರುದ್ಧ ಘೋಷಣೆ: ಕಾಂಗ್ರೆಸ್ ನಾಯಕರು ಕ್ಷಮೆ ಕೇಳಲೇಬೇಕು ಎಂದ ಕಿರಣ್ ರಿಜಿಜು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ದೆಹಲಿಯಲ್ಲಿ ನಡೆದ ರಾಜಕೀಯ ಪ್ರತಿಭಟನೆಯೊಂದು ಭಾನುವಾರ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಇದೀಗ ಈ ವಿಷಯ ರಾಷ್ಟ್ರ ಮಟ್ಟದ ರಾಜಕೀಯ ಚರ್ಚೆಗೆ ತಿರುಗಿದೆ. ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ‘ವೋಟ್ ಚೋರಿ’ ಮೆಗಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೂಗಲಾದ ಘೋಷಣೆಗಳನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತೀವ್ರವಾಗಿ ಖಂಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ಕಾಂಗ್ರೆಸ್ ನಾಯಕತ್ವದ ಹೊಣೆಗಾರಿಕೆಯನ್ನು ಪ್ರಶ್ನಿಸುವಂತಿದೆ ಎಂದು ಹೇಳಿದ್ದಾರೆ.

ರ‍್ಯಾಲಿಯ ವೇಳೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ವೇದಿಕೆಯಲ್ಲೇ ಇದ್ದರು. ಅವರ ಸಮ್ಮುಖದಲ್ಲೇ ಮೋದಿಯ ಸಮಾಧಿಯನ್ನು ಅಗೆಯ ಬೇಕು ಎಂಬ ಆಕ್ಷೇಪಾರ್ಹ ಮತ್ತು ಬೆದರಿಕೆಯ ಸ್ವರೂಪದ ಘೋಷಣೆಗಳು ಕೇಳಿಬಂದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ರಿಜಿಜು ಆಕ್ರೋಶ ವ್ಯಕ್ತಪಡಿಸಿದರು. ನಾವು ಶತ್ರುಗಳಲ್ಲ, ರಾಜಕೀಯ ಪ್ರತಿಸ್ಪರ್ಧಿಗಳು ಮಾತ್ರ ಎಂಬುದನ್ನು ಯಾರೂ ಮರೆಯಬಾರದು ಎಂದು ಅವರು ಹೇಳಿದರು.

2014ರಲ್ಲಿ ಬಿಜೆಪಿ ಸಂಸದರೊಬ್ಬರು ಮಾಡಿದ ಆಕ್ಷೇಪಾರ್ಹ ಹೇಳಿಕೆಗೆ ಪ್ರಧಾನಿ ಮೋದಿ ತಕ್ಷಣ ಕ್ಷಮೆಯಾಚಿಸುವಂತೆ ಸೂಚಿಸಿದ್ದ ಉದಾಹರಣೆಯನ್ನು ಉಲ್ಲೇಖಿಸಿದ ಸಚಿವರು, ಕಾಂಗ್ರೆಸ್ ಕೂಡ ಅದೇ ನೈತಿಕತೆ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು. ಪ್ರಧಾನಿ ಮೋದಿ 140 ಕೋಟಿ ಭಾರತೀಯರನ್ನು ಪ್ರತಿನಿಧಿಸುವ ನಾಯಕರು; ಅವರ ವಿರುದ್ಧ ಇಂತಹ ಘೋಷಣೆಗಳು ದೇಶದ ಗೌರವಕ್ಕೆ ಧಕ್ಕೆ ತರುತ್ತವೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸಂಸತ್ತಿನಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಕಿರಣ್ ರಿಜಿಜು ಆಗ್ರಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !