ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮನವಿ ಮಾಡಿದ್ದು,ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.
ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.
ಶ್ರೀ ಎಸ್.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.