ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರಸಚಿವರಾಗಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ ಹಾಗೂ ರಾಮ್ ಚಂದ್ರ ಪ್ರಸಾದ್ ಸಿಂಗ್ ಅವರು ಸಚಿವ ಸ್ಥಾನಕ್ಕೆ ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಿದ್ದು ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಇಬ್ಬರು ಇತರ ಸಂಸದರನ್ನು ನೇಮಕ ಮಾಡಲಾಗಿದೆ.
ಮುಖ್ತಾರ್ ಅಬ್ಬಾಸ್ ನಖ್ವಿ ನಿರ್ವಹಿಸುತ್ತಿದ್ದ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯನ್ನು ಸಚಿವೆ ಸ್ಮೃತಿ ಇರಾನಿಯವರಿಗೆ ನೀಡಲಾಗಿದೆ. ಇನ್ನು ರಾಮಚಂದ್ರ ಪ್ರಸಾದ್ ಸಿಂಗ್ ಅವರ ಉಕ್ಕುಸಚಿವಾವಲಯದ ಜವಾಬ್ದಾರಿಯನ್ನು ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನೀಡಲಾಗಿದೆ.
ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನಖ್ವಿ ಮತ್ತು ಉಕ್ಕು ಖಾತೆ ಸಚಿವ ಸಿಂಗ್ ಅವರು ತಮ್ಮ ರಾಜ್ಯಸಭೆಯ ಅವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದರು.
ರಾಷ್ಟ್ರಪತಿ ಭವನದ ಹೇಳಿಕೆಯ ಪ್ರಕಾರ, ಪ್ರಧಾನಿ ಸಲಹೆಯಂತೆ, ಕ್ಯಾಬಿನೆಟ್ ಸಚಿವೆ ಸ್ಮೃತಿ ಜುಬಿನ್ ಇರಾನಿ ಅವರಿಗೆ ಅಸ್ತಿತ್ವದಲ್ಲಿರುವ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಉಸ್ತುವಾರಿ ಹಾಗೂ ಕ್ಯಾಬಿನೆಟ್ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಈಗಿರುವ ಖಾತೆಗೆ ಹೆಚ್ಚುವರಿಯಾಗಿ ಉಕ್ಕು ಸಚಿವಾಲಯದ ಉಸ್ತುವಾರಿಯನ್ನು ನಿಯೋಜಿಸಲು ರಾಷ್ಟ್ರಪತಿಗಳು ಸೂಚಿಸಿದ್ದಾರೆ.