ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಘಟನೆಯ ಸಂಪೂರ್ಣ ವರದಿ ನೀಡುವಂತೆ ಮುಖ್ಯಮಂತ್ರಿಗಳ ಕಚೇರಿ (CM Office) ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಮಧುಗಿರಿ ಸಿಪಿಐ ಕಚೇರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತೆರಳಿ ಮಾಹಿತಿ ಪಡೆದುಕೊಂಡರು. ಬಳಿಕ, ಅಧಿಕಾರಿಗಳು ಸೋಡಿಯಂ ಸ್ಫೋಟಗೊಂಡ ಜನಕಲೋಟಿ ಬಳಿಯ ಕೃಷಿಹೊಂಡಕ್ಕೆ ತೆರಳಿ ನೀರು ಮತ್ತು ಸ್ಥಳದಲ್ಲಿದ್ದ ಕೆಮಿಕಲ್ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್ಗೆ ಕಳುಹಿಸಿದ್ದಾರೆ.
ಡ್ರೋನ್ ಪ್ರತಾಪ್ ಅವರು ಕೆಲ ದಿನಗಳ ಹಿಂದೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದರು. ಅನಮತಿ ಇಲ್ಲದೆ ಸ್ಫೋಟಿಸಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಕಳೆದ ಗುರುವಾರ (ಡಿಸೆಂಬರ್ 12) ಮಿಡಿಗೇಶಿ ಪೊಲೀಸರ ಬಂಧಿಸಿದ್ದರು. ಇದೀಗ ನ್ಯಾಯಾಲಯ ಡ್ರೋನ್ ಪ್ರತಾಪ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಪ್ರಕರಣ ಸಂಬಂಧ ಡ್ರೋನ್ ಪ್ರತಾಪ್ ಅವರ ವಿರುದ್ಧ ಮಿಡಿಗೇಶಿ ಠಾಣೆ ಪೊಲೀಸರು BNS ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿದ್ದಾರೆ.