ಹೊಸದಿಗಂತ ಡಿಜಿಟಲ್ ಡೆಸ್ಕ್:
2024 ರ ಲೋಕಸಭೆ ಚುನಾವಣೆಗೆ ಸಂಪೂರ್ಣ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾನುವಾರ ಸಂಜೆ 6 ಗಂಟೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರನ್ನು ಭೇಟಿ ಮಾಡಲಿದ್ದಾರೆ. ಇತರ ರಾಜಕೀಯ ವಿಷಯಗಳ ಹೊರತಾಗಿ 2024 ರ ಲೋಕಸಭೆ ಚುನಾವಣೆಯ ಕಾರ್ಯತಂತ್ರವನ್ನು ನಾಯಕರು ಚರ್ಚಿಸುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ವರದಿಯ ಪ್ರಕಾರ “ನಿತೀಶ್ ಕುಮಾರ್ ಮತ್ತು ನಾನು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುತ್ತೇವೆ. ನಾವು ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ” ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಯಾದವ್ ದೆಹಲಿಗೆ ಆಗಮಿಸಿದ ನಂತರ ಹೇಳಿದ್ದಾರೆ.
ಆಡಳಿತಾರೂಢ ಬಿಜೆಪಿಯನ್ನು 2024ರಲ್ಲಿ ಅಧಿಕಾರದಿಂದ ಕೆಳಗಿಳಿಸಲು ಎಲ್ಲಾ ಪ್ರಯತ್ನಗಳನ್ನೂ ಪ್ರತಿಪಕ್ಷಗಳು ಮಾಡಲಿವೆ ಎಂದೂ ಲಾಲೂ ಹೇಳಿದ್ದಾರೆ.