ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾಪ್ರದೇಶ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕರಿಸಿದ್ದು, ಈ ಸಮಾರಂಭಕ್ಕೆ ಭಾರತದ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭೇಟಿ ನೀಡಿದ್ದಾರೆ.
ಪ್ರಮಾಣವಚನ ಕಾರ್ಯಕ್ರಮ ಬಳಿಕ ಸ್ಪೀಕರ್ ಓಂ ಬಿರ್ಲಾ ಅವರು ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಕ್ ರೆಹಮಾನ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತಕ್ಕೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸಿದರು. ಈ ವೇಳೆ ಭಾರತ ಮತ್ತು ಬಾಂಗ್ಲಾದೇಶದ ಜನರ ಯೋಗಕ್ಷೇಮಕ್ಕಾಗಿ ಒಟ್ಟಾಗಿ ಕೆಲಸ ಮಾಡುವ ಆಶಾವಾದವನ್ನು ಇಬ್ಬರೂ ನಾಯಕರು ವ್ಯಕ್ತಪಡಿಸಿದರು.
ಬಿರ್ಲಾ ಈ ಕುರಿತು ಪೋಸ್ಟ್ ಮಾಡಿದ್ದು , ‘ಇಂದು ಢಾಕಾದಲ್ಲಿ ಪ್ರಧಾನಿ ತಾರಿಕ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶದ ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದು, ಸಂತಸ ತಂದಿದೆ. ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ರಾಷ್ಟ್ರವನ್ನು ನಿರ್ಮಿಸುವ ಬಾಂಗ್ಲಾದೇಶದ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ’ ಎಂದು ಪೋಸ್ಟ್ ಮಾಡಿದ್ದಾರೆ.
ಬಾಂಗ್ಲಾದೇಶದ ಹೈಕಮಿಷನರ್ ರಿಯಾಜ್ ಹಮೀದುಲ್ಲಾ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ‘ಪ್ರಧಾನಿ ತಾರಿಕ್ ರೆಹಮಾನ್ ಅವರು ಭಾರತಕ್ಕೆ ಮತ್ತು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರದ ನಂತರ ನಡೆದ ಸೌಜನ್ಯ ಸಭೆಯಲ್ಲಿ ಭೇಟಿ ನೀಡಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ ಎಂದು ತಿಳಿಸಿದ್ದಾರೆ.
ತಾರಿಕ್ ರೆಹಮಾನ್ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ, ಬಿಎನ್ಪಿ ನಾಯಕರಾದ ಮಿರ್ಜಾ ಫಕ್ರುಲ್ ಇಸ್ಲಾಂ ಅಲಂಗೀರ್, ಅಮೀರ್ ಖಸ್ರು ಮಹ್ಮದ್ ಚೌಧರಿ, ಸಲಾಹುದ್ದೀನ್ ಅಹ್ಮದ್, ಇಕ್ಬಾಲ್ ಹಸನ್ ಮಹ್ಮದ್, ಹಫೀಜ್ ಉದ್ದೀನ್ ಅಹ್ಮದ್ ಮತ್ತು ಇತರರು ಸೇರಿದಂತೆ ಸಂಪುಟದ ಇತರ ಸದಸ್ಯರು ಸಹ ಪ್ರಮಾಣ ವಚನ ಸ್ವೀಕರಿಸಿದರು. ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಢಾಕಾದ ರಾಷ್ಟ್ರೀಯ ಸಂಸತ್ತಿನ ದಕ್ಷಿಣ ಪ್ಲಾಜಾದಲ್ಲಿ ಪ್ರಮಾಣ ವಚನ ಬೋಧಿಸಿದರು.



