ಹೊಸ ದಿಗಂತ ವರದಿ, ಮಡಿಕೇರಿ:
ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಿ ಎರಡು ವಿಷಯವನ್ನೂ ಸಮಾನವಾಗಿ ಸ್ವೀಕರಿಸಿ ಎಂದು ಭಾರತ ಮಹಿಳಾ ಹಾಕಿ ತಂಡದ ತರಬೇತುದಾರೆ ಅಂಕಿತಾ ಸುರೇಶ್ ಅವರು ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಳೆಯ ವಿದ್ಯಾರ್ಥಿನಿಯೂ ಆಗಿರುವ ಅವರು, ಕಾಲೇಜಿನಲ್ಲಿ ಶುಕ್ರವಾರ ನಡೆದ ‘ಕಾಲೇಜು ವಾರ್ಷಿಕೋತ್ಸವ ಮತ್ತು ವಿದ್ಯಾರ್ಥಿ ಸಂಘದ ಸಮಾರೋಪ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆ ಮತ್ತು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಆಸಕ್ತಿ ಇದ್ದಲ್ಲಿ ಹೆಚ್ಚಿನ ಸಾಧನೆ ಮಾಡಬಹುದು. ಆ ನಿಟ್ಟಿನಲ್ಲಿ ಎರಡೂ ಕ್ಷೇತ್ರದಲ್ಲಿಯೂ ಹೆಚ್ಚಿನ ಗಮನಹರಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ದ್ವಿತೀಯ ಪಿಯುಸಿ ಎಂಬುದು ಮಹತ್ತರವಾದ ಮೆಟ್ಟಿಲು. ಈ ಹಂತವು ಜೀವನದ ಮಹತ್ವವಾದ ನಿರ್ಧಾರವನ್ನು ತೆಗೆದುಕೊಳ್ಳುವ ಹಂತ. ಈ ಹಂತವನ್ನು ಸ್ಪರ್ಧಾ ಮನೋಭಾವದಿಂದ ಸ್ವೀಕರಿಸಿ ಮುಂದೆ ಸಾಗಬೇಕು ಎಂದರು.
ಪ.ಪೂ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು ಮಾತನಾಡಿ, ಕಾಲೇಜಿನಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅವಕಾಶಗಳನ್ನು ಬಳಸಿಕೊಂಡು ತಮ್ಮ ಗುರಿ ತಲುಪಬೇಕು ಎಂದರು.
ವಿದ್ಯಾರ್ಥಿಗಳು ಉತ್ತಮ ಸತ್ಪ್ರಜೆಯಾಗುವಲ್ಲಿ ಶಿಕ್ಷಕರ ಪರಿಶ್ರಮ ಅತಿ ಮುಖ್ಯ. ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನ ಪಡೆದು ಒಂದು ಉನ್ನತ ಪದವಿಗೆ ಹೋಗುವಂತಾಗಲಿ ಎಂದು ಶುಭ ಹಾರೈಸಿದರು.
ಆಕಾಶವಾಣಿಯ ಉದ್ಘೋಷಕ ಸುಬ್ರಾಯ ಸಂಪಾಜೆ , ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಧನಂಜಯ ಅಗೋಳಿಕಜೆ ಮಾತನಾಡಿದರು.