ಹೊಸದಿಗಂತ ವರದಿ ಹುಬ್ಬಳ್ಳಿ:
ಹುಬ್ಬಳ್ಳಿ ನಗರದಲ್ಲಿ ಕೊಳಗೇರಿ ಮಂಡಳಿಯಿಂದ ನಿರ್ಮಿಸಿದ ಮನೆ ಹಂಚಿಕೆಯ ಕಾರ್ಯಕ್ರಮಕ್ಕೆ ಹುಬ್ಬಳ್ಳಿಗೆ ಬರುವವರಿಗೆ ಸರ್ಕಾರ ಮದ್ಯ ವಿತರಿಸಲು ಮುಂದಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು.
ಶನಿವಾರ ನಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಎರಡೂವರೆ ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಎಲ್ಲ ಮದ್ಯ ವ್ಯಾಪಾರಸ್ಥರು ಹೆಚ್ಚುವರಿ ಮದ್ಯ ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಅಬಕಾರಿ ಇಲಾಖೆಯ ಹುಬ್ಬಳ್ಳಿ ರೇಂಜ್ 1 ವಾಟ್ಸ್ಆ್ಯಪ್ ಗ್ರೂಪ್ಲ್ಲಿ ಅಧಿಕಾರಿಯೊಬ್ಬರು ಸಂದೇಶ ಕಳುಹಿಸಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಲಿಕ್ಕರ್ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ ಎಂದು ವ್ಯಂಗ್ಯವಾಡಿದರು.
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವ ಸಂಪುಟದ ಸಚಿವರು ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲಿದ್ದು, ಎಲ್ಲ ಮದ್ಯದ ಅಂಗಡಿಯವರು ಸಾಕಷ್ಟು ಪ್ರಮಾಣದಲ್ಲಿ ಮದ್ಯ ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಹೇಳುತ್ತಾರೆ ಎಂದರೆ, ರಾಜ್ಯದಲ್ಲಿ ಏನು ನಡೆಯುತ್ತಿದೆ? ಸರ್ಕಾರಕ್ಕೆ ಲಿಕ್ಕರ್ ಹಂಚಿಕೆ ಮುಖ್ಯವೋ, ಮನೆ ಹಂಚಿಕೆ ಮುಖ್ಯವೋ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದರು.



