ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಎದುರಾಗುವ ಬರ ಪರಿಸ್ಥಿತಿ ನಿಭಾಯಿಸಲು ನಮ್ಮ ಸರ್ಕಾರ ಸನ್ನದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಟ್ವೀಟ್ ಮಾಡಿ ಜನರಿಗೆ ಮಾಹಿತಿ ನೀಡಲಾಗಿದೆ. ಜನವರಿ ವೇಳೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಸಮಸ್ಯೆ ತಪ್ಪಿಸಲು ದಿನದ 24 ಗಂಟೆಯೂ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದಿದ್ದಾರೆ.
ಬರ ನಿರ್ವಹಣೆಗಾಗಿ ಜಿಲ್ಲಾ ಮಟ್ಟದಲ್ಲಿ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ತಂಡ ನಿರ್ಮಾಣ ಮಾಡಲಾಗಿದೆ. ಈಗಾಗಲೇ 183 ಟಾಸ್ಕ್ ಫೋರ್ಸ್ ಸಭೆ ನಡೆದಿದೆ. ಪ್ರತೀ ಶಾಸಕರಿಗೂ ತಮ್ಮ ಜಿಲ್ಲೆಯ ಬರದ ಪರಿಸ್ಥಿತಿ ಬಗ್ಗೆ ಸಂಪೂರ್ಣ ಅರಿವಿದೆ, ಬರ ಪರಿಸ್ಥಿತಿಯ ನಿರ್ವಹಣೆ ಜವಾಬ್ದಾರಿ ಅವರ ಮೇಲಿದೆ ಎಂದು ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್ ಖಾತೆಗೆ ಎಸ್.ಡಿ.ಆರ್.ಎಫ್ ಮೂಲಕ ಸುಮಾರು ೯೦೦ ಕೋಟಿ ರೂಪಾಯಿ ಹಣ ನೀಡಲಾಗಿದೆ. ಹಣ ಬಳಕೆಯ ಸಂಪೂರ್ಣ ಅಧಿಕಾರವನ್ನು ಜಿಲ್ಲಾ ಟಾಸ್ಕ್ ಫೋರ್ಸ್ಗಳಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಜನರ ಜೊತೆಗೆ ಜಾನುವಾರುಗಳ ಬಗ್ಗೆಯೂ ನಮ್ಮ ಸರ್ಕಾರ ಯೋಚಿಸಿದ್ದು, ಹಣ ಎಷ್ಟಾದರೂ ಖರ್ಚಾಗಲಿ ಜಾನುವಾರುಗಳು ಹಸಿವಿನಿಂದ ಇರುವಂತಿಲ್ಲ. ಇದಕ್ಕಾಗಿ ಎಷ್ಟೇ ಮೇವು ಬೇಕಿದ್ದರೂ ನೀಡುತ್ತೇವೆ ಎಂದು ಹೇಳಿದ್ದಾರೆ.