ಗ್ಯಾರಂಟಿಗಳ ನಡುವೆ ಸಿಲುಕಿದ ರಾಜ್ಯ ಸರಕಾರ: ಏಳನೇ ಯೋಜನೆ ಜಾರಿಗೆ ಪಟ್ಟು ಹಿಡಿದವರಿಗೆ ಸಿಎಂ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐದು ಗ್ಯಾರಂಟಿ ಯೋಜನೆ (Congress Guarantee) ಘೋಷಣೆ ಮಾಡಿದ್ದ ಕಾಂಗ್ರೆಸ್‌ ಸರಕಾರದ ಇದೀಗ ಏಳನೇ ಗ್ಯಾರಂಟಿ ಎನ್ನಲಾಗುತ್ತಿರುವ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸ್ತ್ರೀಶಕ್ತಿ ಸಂಘದ ಸದಸ್ಯರು ಕುಮಾರಕೃಪಾ ರಸ್ತೆಯಲ್ಲಿರುವ ಸಿಎಂ ಸಿದ್ದರಾಮಯ್ಯ ಅವರ ಮನೆಯೆದುರು ಬುಧವಾರ ಬೆಳಗ್ಗೆಯಿಂದಲೇ ಪ್ರತಿಭಟನೆಗೆ ಕುಳಿತಿದ್ದರು. ಸಂಪುಟ ಸಭೆ ಮುಗಿಸಿ ಆಗಮಿಸಿದ ಸಿದ್ದರಾಮಯ್ಯ, ಸದಸ್ಯರನ್ನು ಭೇಟಿ ಮಾಡಿದರು.

ಬಳಿಕ ಮಾತನಾಡಿದ ಸ್ತ್ರೀಶಕ್ತಿ ಸಂಘದ ಸದಸ್ಯರು , ಮುಂದಿನ ವರ್ಷ ಸ್ತ್ರೀ ಶಕ್ತಿ ಸಂಘಗಳ ಸಾಲಮನ್ನಾ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಸಾಲಮನ್ನಾ ಬಗ್ಗೆ ಘೋಷಣೆ ಮಾಡಿರೋದು ಸತ್ಯ. ಮುಂದಿನ ವರ್ಷ ಅದನ್ನು ಜಾರಿ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಈ ಸಾಲಮನ್ನಾಕ್ಕೆ 2,400 ಕೋಟಿ ರೂ. ಬೇಕಾಗುತ್ತದೆ. ಹೀಗಾಗಿ ಈ ವರ್ಷ ಆಗೋದಿಲ್ಲ. ಮುಂದಿನ ವರ್ಷ ಮಾಡ್ತೀನಿ ಎಂದು ಸಿಎಂ ತಿಳಿಸಿದ್ದಾರೆ. ಸಂಘದ ಮಹಿಳೆಯರ ಜತೆ ಚರ್ಚೆ ಮಾಡಿ ನಾವು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಚುನಾವಣೆ ವೇಳೆ ಕಾಂಗ್ರೆಸ್‌ ಪ್ರಮುಖವಾಗಿ ಐದು ಗ್ಯಾರಂಟಿ ಘೋಷಿಸಿತ್ತು. ಅದರಂತೆ ಪ್ರತಿ ಮನೆಯ 200 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುವ ಗೃಹಜ್ಯೋತಿ, ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ, ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆ, ನಿರುದ್ಯೋಗಿಗಳಿಗೆ ಭತ್ಯೆ ಹಾಗೂ ಮಹಿಳೆಯರಿಗೆ ಉಚಿತ ಬಸ್‌ ಸೇವೆಯನ್ನು ಘೋಷಣೆ ಮಾಡಲಾಗಿತ್ತು. ಈ ಪೈಕಿ ಉಚಿತ ಬಸ್‌ ಸೇವೆಗೆ ಈಗಾಗಲೆ ಚಾಲನೆ ನೀಡಲಾಗಿದೆ, ಗೃಹಜ್ಯೋತಿ ಯೋಜನೆಗೆ ನೋಂದಣಿ ನಡೆಯುತ್ತಿದೆ.

ಅದ್ರ ಜೊತೆಗೆ ಇದೆಲ್ಲದರ ನಡುವೆ, ಅಂಗನವಾಡಿ ಕಾರ್ಯಕರ್ತೆಯರು ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ಹಾಗೂ ಸಹಾಯಕರಿಯರಿಗೆ ಮಾಸಿಕ 10 ಸಾವಿರ ರೂ. ನೀಡುವುದಾಗಿ ಕಾಂಗ್ರೆಸ್‌ ಚುನಾವಣೆ ಸಮಯದಲ್ಲಿ ಘೋಷಿಸಿತ್ತು. ಅದನ್ನು ಈಡೇರಿಸಬೇಕು ಎಂದು ಆಗ್ರಹ ಕೇಳಿಬರುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!