ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿನ ಹೊಸ ವಿಮಾನ ನಿಲ್ದಾಣಗಳನ್ನು ರಾಜ್ಯ ಸರಕಾರದ ವತಿಯಿಂದಲೇ ನಿರ್ವಹಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಇದರ ಸಾಧಕ-ಬಾಧಕಗಳನ್ನು ನೋಡಿಕೊಂಡು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸದ್ಯಕ್ಕೆ ನಾವು ಸಾವಿರಾರು ಕೋಟಿ ರೂ.ವಿನಿಯೋಗಿಸಿ ರಾಜ್ಯದ ಹಲವೆಡೆ ವಿಮಾನ ನಿಲ್ದಾಣಗಳನ್ನು ನಿರ್ಮಿಸಿದ್ದೇವೆ. ಆದರೆ ಬಳಿಕ ಇವುಗಳನ್ನು ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಬಿಟ್ಟುಕೊಡುತ್ತಿದ್ದೇವೆ. ಅವರು, ಇವುಗಳನ್ನು ಅದಾನಿ ಸೇರಿದಂತೆ ಹಲವು ಖಾಸಗಿ ಕಂಪನಿಗಳಿಗೆ ವಹಿಸುತ್ತಿದ್ದಾರೆ. ಹೀಗಾಗಿ ನಮ್ಮದೇ ವಿಮಾನ ನಿಲ್ದಾಣಗಳ ಮೇಲೆ ನಮಗೆ ಯಾವ ಹಕ್ಕೂ ಇಲ್ಲದಂತಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ನಮ್ಮ ವಿಮಾನ ನಿಲ್ದಾಣಗಳನ್ನು ನಾವೇ ನಿರ್ವಹಿಸುವುದರಿಂದ ಒಳ್ಳೆಯದಾಗುತ್ತದೆ ಎನ್ನುವ ಭಾವನೆ ಇದೆ. ವಿಮಾನ ನಿಲ್ದಾಣ ಪ್ರಾಧಿಕಾರದವರು ಯಾರಿಗೋ ವಹಿಸುವ ಬದಲು ನಾವೇ ಆ ಕೆಲಸವನ್ನು ಮಾಡಬಹುದು. ಸದ್ಯಕ್ಕೆ ಇದನ್ನು ಎಲ್ಲ ಮಗ್ಗುಲಿನಿಂದಲೂ ಪರಿಶೀಲಿಸಲಾಗುತ್ತಿದೆ. ಮಹಾರಾಷ್ಟ್ರದ ಮಾದರಿಯನ್ನೂ ಗಮನಿಸುತ್ತಿದ್ದೇವೆ ಎಂದು ಅವರು ನುಡಿದರು.
ರಾಜ್ಯದಲ್ಲಿ ಪಾರದರ್ಶಕ ಮತ್ತು ಕಾನೂನುಬದ್ಧ ರೀತಿಯಲ್ಲಿ ಬಂಡವಾಳ ಹೂಡಿ, ಉದ್ಯೋಗಸೃಷ್ಟಿ ಮಾಡಲು ಯಾರೇ ಮುಂದೆ ಬಂದರೂ ಅವರನ್ನು ಸ್ವಾಗತಿಸಲಾಗುವುದು. ಇದರಲ್ಲಿ ತಾರತಮ್ಯ ಇರುವುದಿಲ್ಲ ಎಂದು ಪಾಟೀಲ್ ಹೇಳಿದರು.