ಮಾಜಿ ಸೈನಿಕರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ: ಸಚಿವ ಬಿ.ಸಿ.ನಾಗೇಶ್

ಹೊಸ ದಿಗಂತ ವರದಿ,ಮಡಿಕೇರಿ:

ದೇಶದ ಪ್ರಜೆಗಳು ನೆಮ್ಮದಿಯಿಂದ ಬದುಕುತ್ತಿರುವುದರ ಹಿಂದೆ ಸೈನಿಕರ ಶ್ರಮವಿದೆ. ಸೈನಿಕರ ಸೇವೆಗಳನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಮಾಜಿ ಸೈನಿಕರ ಕುಂದು ಕೊರತೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಾಜಿ ಸೈನಿಕರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಕೇಂದ್ರದಲ್ಲಿ ಮತ್ತು ತಾಲೂಕುಗಳಲ್ಲಿ ಸೈನಿಕ ಭವನ ನಿರ್ಮಾಣಕ್ಕೆ ಜಾಗ ಒದಗಿಸಲಾಗುವುದು. ಮಾಜಿ ಸೈನಿಕರ ಶ್ರೇಯೋಭಿವೃದ್ಧಿಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಮಾಜಿ ಸೈನಿಕರಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿಳಂಬ ಮಾಡಿದರೆ ಕೂಡಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತರುವಂತೆ ಅವರು ಮಾಜಿ ಸೈನಿಕರಿಗೆ ಸಲಹೆ ಮಾಡಿದರು.
ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಿವೃತ್ತ ಮೇಜರ್ ಜನರಲ್ ಬಿ.ಎ.ಕಾರ್ಯಪ್ಪ ಅವರು ಮಾತನಾಡಿ, ಜಿಲ್ಲೆಯ ಮಾಜಿ ಸೈನಿಕರ ಸಂಘದ ಕೇಂದ್ರ ಸ್ಥಾನ ಮಡಿಕೇರಿಯಲ್ಲಿದ್ದು, ಮಾಜಿ ಸೈನಿಕರು ಕುಳಿತುಕೊಳ್ಳಲು ಅವರ ಅಹವಾಲುಗಳನ್ನು ಸ್ವೀಕರಿಸಲು ಯಾವುದೇ ಸ್ಥಳವಿಲ್ಲದಿರುವುದರಿಂದ ಮಡಿಕೇರಿ ನಗರದಲ್ಲಿ ಮತ್ತು ತಾಲೂಕುಗಳಲ್ಲಿ ಸಮುದಾಯ ಭವನ ನಿರ್ಮಿಸಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.
ಆದೇಶ ಪಾಲನೆಯಾಗುತ್ತಿಲ್ಲ: ಸರ್ಕಾರಿ ಜಾಗ ಮಂಜೂರಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಮತ್ತು ಉಚ್ಛ ನ್ಯಾಯಾಲಯದ ಆದೇಶವಿದ್ದರೂ ಜಿಲ್ಲೆಯಲ್ಲಿ ಮಾಜಿ ಸೈನಿಕರ ಮತ್ತು ವಿಧವೆಯರ ಅರ್ಜಿಗಳು ವಿಲೇವಾರಿ ಆಗದೆ ಬಾಕಿ ಇವೆ.ಈ ಬಗ್ಗೆ ಪರಿಶೀಲಿಸಿ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಅವರು ಮನವಿ ಮಾಡಿದರು.
ಮಾಜಿ ಸೈನಿಕರ ಮನೆ ಕಂದಾಯದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡುವಂತೆ ಆದೇಶವಿದ್ದರೂ, ಇಲ್ಲಿಯವರೆಗೆ ಜಿಲ್ಲೆಯ ಗ್ರಾಮ ಪಂಚಾಯತಿಗಳಿಂದ ಮಾಜಿ ಸೈನಿಕರಿಗೆ ರಿಯಾಯಿತೊ ಸಿಗುತ್ತಿಲ್ಲ ಎಂದು ಅವರು ಸಚಿವರ ಗಮನಕ್ಕೆ ತಂದರು.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸೈನಿಕ ಅದಾಲತ್/ ಸಂಪರ್ಕ ಸಭೆ ನಡೆಸಬೇಕು. ಇದರಿಂದ ಸೈನಿಕರ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು, ಮಾಜಿ ಸೈನಿಕರು ಸೇರಿದಂತೆ ಹಿರಿಯರನ್ನು ಕಚೇರಿಗಳಲ್ಲಿ ಅಧಿಕಾರಿಗಳು ಗೌರವದಿಂದ ಕಾಣುವಂತೆ ಹಾಗೂ ನಿಯಮಾನುಸಾರ ಸಕಾಲದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುವುದು. ಮತ್ತು ಸೈನಿಕರ ಸಂಪರ್ಕ ಸಭೆಯನ್ನು ಏರ್ಪಡಿಸಲಾಗುವುದು ಎಂದರು.
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೆ.ಪಿ.ಸೋಮಣ್ಣ ಅವರು ಮಾತನಾಡಿ, ಸೈನಿಕ ಕಲ್ಯಾಣ ಇಲಾಖೆಯಲ್ಲಿ ಖಾಯಂ ಜಂಟಿ ನಿರ್ದೇಶಕರು ಇಲ್ಲದಿರುವುದರಿಂದ ಸೈನಿಕರ ಕುಂದು ಕೊರತೆಗಳನ್ನು ಆಲಿಸಲು ಅಧಿಕಾರಿಗಳು ಇಲ್ಲದಂತಾಗಿದೆ. ಆದ್ದರಿಂದ ಖಾಯಂ ಜಂಟಿ ನಿರ್ದೇಶಕರನ್ನು ನೇಮಕ ಮಾಡಬೇಕು ಎಂದು ಸಚಿವರ ಗಮನಕ್ಕೆ ತಂದರು.
ಮಾಜಿ ಸೈನಿಕರ ಪಿಂಚಣಿ ಹೊಂದಿರುವ ಕುಟುಂಬಗಳಿಗೆ ಯಾವುದೇ ಆದಾಯ ಇಲ್ಲದಿರುವುದರಿಂದ ಸರ್ಕಾರ ನೀಡುವ ಬಿಪಿಎಲ್ ಕಾರ್ಡ್‌ನ ಸೌಲಭ್ಯವನ್ನು ಈ ಕುಟುಂಬಗಳಿಗೂ ನೀಡುವಂತಾಗಬೇಕು ಎಂದು ಮನವಿ ಮಾಡಿದರು.
ಮಾಜಿ ಸೈನಿಕರು ಈಗಾಗಲೇ ಅನುಭವಿಸುತ್ತಿರುವ ಪೈಸಾರಿ ಜಮೀನನ್ನು ಅವರಿಗೆ ಮಂಜೂರು ಮಾಡುವುದು, ಜಮೀನು ಮಂಜೂರು ಆಗದ ಮಾಜಿ ಸೈನಿಕರಿಗೆ ತಾಲೂಕುವಾರು ಸೈನಿಕ ಕಾಲೋನಿ ಮಾಡಿ ನಿವೇಶನ ನೀಡುವುದು, ಹಾಗೂ ತಾಲೂಕುವಾರು ಸೈನಿಕ ಸಮುದಾಯ ಭವನ ನಿರ್ಮಿಸಬೇಕು ಎಂದು ಸಚಿವರ ಗಮನಸೆಳೆದರು.
ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಲೋಲಾಕ್ಷ ಮತ್ತಿತರರು ಹಲವು ಮಾಹಿತಿ ನೀಡಿದರು.
ವಿಧಾನ‌ಪರಿಷತ್‌ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ಮಾಜಿ ಸೈನಿಕರು, ಅಧಿಕಾರಿಗಳು ಇತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!