ಹೊಸದಿಗಂತ ವರದಿ, ದಾವಣಗೆರೆ :
ದಾವಣಗೆರೆ ಜಿಲ್ಲೆಯ ಮಾದಾಪುರ ಕೆರೆಯಲ್ಲಿ ಸ್ಥಳೀಯರು ಜೆಸಿಬಿಯಿಂದ ಮಣ್ಣನ್ನು ತೆಗೆಯುವಾಗ ಶಿಲಾಶಾಸನ ಪತ್ತೆಯಾಗಿದೆ. ವಿಷಯ ತಿಳಿದ ಕಮಲಾಪುರದಲ್ಲಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕ ಡಾ.ಆರ್.ಶೇಜೇಶ್ವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಇದು ಬಾದಾಮಿ ಚಾಲುಕ್ಯರ ಶಿಲಾಶಾಸನ ಎಂಬುದು ದೃಢಪಟ್ಟಿದೆ.
ಶಾಸನವು 5 ಅಡಿ ಎತ್ತರವಿದ್ದು, ಹಳೆಗನ್ನಡದ 17 ಸಾಲುಗಳನ್ನು ಒಳಗೊಂಡಿದೆ. ಇದು ಕ್ರಿ.ಶ 7ನೇ ಶತಮಾನದ ಬಾದಾಮಿ ಚಾಲುಕ್ಯರ ಒಂದನೇ ವಿಕ್ರಮಾದಿತ್ಯ(ಕ್ರಿ.ಶ.654-681) ಕಾಲದ ಶಾಸನವಾಗಿದೆ. ಒಂದನೇ ವಿಕ್ರಮಾದಿತ್ಯನು ರಾಜ್ಯವಾಳುವಾಗ ಅವನ ಅಧಿಕಾರಿ ಸಿಂಘವೆಣ್ಣನು ಬಳ್ಳಾವಿ ನಾಡನ್ನು ಆಳುತ್ತಿದ್ದಾಗ ಪೂರ್ವ ಮರ್ಯಾದೆಯಿಂದ ಪ್ರಜೆಗಳಿಗಾಗಿ ಊರ ಮೇಲಿನ ಕೆಲವು ತೆರಿಗೆಗಳನ್ನು ಮನ್ನಾ ಮಾಡಿರುವುದು, ಕೆರೆ ನಿರ್ಮಿಸಿದ ಓಜರಿಗೆ ಆರು ಮತ್ತರು ಭೂಮಿಯನ್ನು ದಾನ ನೀಡಿರುದು ಹಾಗೂ ಈ ಭೂಮಿಯು ಬಳ್ಳಾವಿ ಎಪ್ಪತ್ತರ ಒಕ್ಕಲುಗಳಿಗೆ ಸಲ್ಲುತ್ತೆಂಬುದನ್ನು ಶಾಸನದಲ್ಲಿ ಉಲ್ಲೇಖಿಸಲಾಗಿದೆ.
ಈ ಶಾಸನ ಶೋಧನೆಯಿಂದ ಬಳ್ಳಾವಿ ಎಪ್ಪತ್ತು ಎಂಬ 70 ಗ್ರಾಮಗಳಿದ್ದ ಆಡಳಿತ ವಿಭಾಗದ ಪ್ರಾಚೀನತೆ ಹಾಗೂ ಶಾಸನವು 1,344 ವರ್ಷಗಳಷ್ಟು ಪುರಾತನವಾದದು ಎಂಬುದು ತಿಳಿದುಬಂದಿದೆ. ಈ ಶಾಸನದ ಮುಂಭಾಗ ಹಾಗೂ ಹಿಂಭಾಗದಲ್ಲಿ ಅಪೂರ್ಣ ಉಬ್ಬು ಶಿಲ್ಪವಿದೆ. ಈ ಶಾಸನ ಓದಿಕೊಟ್ಟ ಪ್ರೊ.ಶ್ರೀನಿವಾಸ ಪಾಡಿಗರ, ರಮೇಶ ಹಿರೇಜಂಬೂರು, ಕ್ಷೇತ್ರ ಕಾರ್ಯದಲ್ಲಿ ಸಹಕರಿಸಿದ ಡಾ.ರವಿಕುಮಾರ ನವಲಗುಂದ, ಮಂಜಪ್ಪ ಚುರ್ಚಿಗುಂಡಿ, ಮಾದಾಪುರ ಗ್ರಾಮ ಆಡಳಿತಾಧಿಕಾರಿ ವಿಶ್ವನಾಥ, ಗ್ರಾಮಸ್ಥರಾದ ಬುಜಂಗ, ವೀರೇಶ್ ಹಾಗೂ ಇತರರ ಕಾರ್ಯವನ್ನು ಪುರಾತ್ವತ ಇಲಾಖೆ ನಿರ್ದೇಶಕರು ಶ್ಲಾಘಿಸಿದ್ದಾರೆ.