ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿಕಾರಿಪುರದಲ್ಲಿ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ತಪ್ಪು ಗ್ರಹಿಕೆಯಿಂದ ಇಂತಹ ಘಟನೆ ನಡೆದಿದೆ, ಬಂಜಾರಾ ಸಮುದಾಯದ ಹಿರಿಯರನ್ನು ಕರೆದು ಮಾತನಾಡುತ್ತೇನೆ.ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಏಕಾ ಏಕಿ ನಮ್ಮ ಮನೆ ಮೇಲೆ ದಾಳಿ ನಡೆದಿದೆ. ಇದರಿಂದ ಬಹಳ ನೋವಾಗಿದೆ. ಬಂಜಾರಾ ಸಮುದಾಯದ ಸಮಸ್ಯೆಗಳನ್ನು ಬಗೆಹರಿಸುತ್ತೇನೆ, ಯಾವುದೇ ಕಾರಣಕ್ಕೂ ಸಮಾಜ ಘಾತುಕ ಶಕ್ತಿಯ ಮಾತನ್ನು ಕೇಳಬೇಡಿ. ನಿಮ್ಮ ಸಮಾಜಕ್ಕೆ ನ್ಯಾಯ ಒದಗಿಸುವಲ್ಲಿ ಕ್ರಮ ಕೈಗೊಳ್ಳುತ್ತೇನೆ, ಬಂಜಾರ ಸಮುದಾಯದ ಸಮಸ್ಯೆ ಬಗ್ಗೆ ನಾನು ವಿಜಯೇಂದ್ರ ಇಬ್ಬರೂ ಚರ್ಚೆ ನಡೆಸಲು ಸಿದ್ದನಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.
ಗಲಭೆ ಪ್ರಕರಣ ಸಂಬಂಧಿಸಿದಂತೆ ಯಾರನ್ನೂ ಬಂಧಿಸಬೇಡಿ ಎಂದು ಪೊಲೀಸರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.