ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಾಳಯದಲ್ಲಿ 2024ರ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭವಾಗಿದೆ.
ಗುರುವಾರ ದೆಹಲಿಯ ಕೇಂದ್ರ ಕಚೇರಿಯಲ್ಲಿ ಮಹತ್ವದ ಸಭೆ ಕರೆಯಲಾಗಿದ್ದು, ಚುನಾವಣೆ ಎದುರಿಸುವ ಕುರಿತಾಗಿ ಈ ಸಭೆಯಲ್ಲಿ ರಣತಂತ್ರ ಹೆಣೆಯಲು ಪಕ್ಷ ಸಿದ್ಧತೆ ಮಾಡಿಕೊಂಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇಶದ ಇತರ ಎಲ್ಲಾ ರಾಜ್ಯಗಳ ಪ್ರಮುಖ ನಾಯಕರು ಹಾಗೂ ರಾಜ್ಯಾಧ್ಯಕ್ಷರು ಭಾಗಿಯಾಗಲಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್, ಎಲ್ಲಾ ರಾಜ್ಯವಾರು ನಾಯಕರಿಗೆ ಟಾರ್ಗೆಟ್ ನೀಡಲು ಮುಂದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಒಕ್ಕೂಟಗಳ ನೆರವಿನೊಂದಿಗೆ ಬಿಜೆಪಿ ವಿರುದ್ಧ ಅಜೆಂಡಾ ರೂಪಿಸುವುದು, ಈ ಮೂಲಕ ಕಾಂಗ್ರೆಸ್ ಬಲಿಷ್ಠ ರಾಜ್ಯಗಳಲ್ಲಿ ಹೆಚ್ಚು ಸ್ಥಾನಗಳು ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದೆ ಎಂದು ಮೂಲಗಳು ಮಾಹಿತಿ ಹಂಚಿಕೊಂಡಿವೆ.