ಹೊಸದಿಗಂತ ವರದಿ, ಶ್ರೀರಂಗಪಟ್ಟಣ :
ಆಪರೇಷನ್ ಸಿಂದೂರ್ ಮೂಲಕ ಭಾರತದ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ, ಜೊತೆಗೆ ದೇಶದೊಳಗೇ ಇದ್ದು ದೇಶದ್ರೋಹಿ ಕೆಲಸಕ್ಕೆ ಮುಂದಾಗುತ್ತಿರುವವರ ವಿರುದ್ದವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಒಕ್ಕಲಿಗ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದ ಸ್ವಾಮೀಜಿ ಹೇಳಿದರು.
ಪಟ್ಟಣದಲ್ಲಿ ಬಿಜೆಪಿ, ರೈತಸಂಘ, ಬಿಜಿಎಸ್ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಆಪರೇಷನ್ ಸಿಂದೂರ ಮೂಲಕ ದೇಶದ ಸೈನಿಕರು ಉಗ್ರರನ್ನ ಸದೆ ಬಡಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಬೃಹತ್ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದ ಸೈನಿಕರ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿರುವುದು ಸರಿಯಲ್ಲ. ದೇಶದ ಗಡಿ ಹಾಗೂ ಭದ್ರತೆ ವಿಷಯದಲ್ಲಿ ರಾಜಕೀಯ ಬಿಟ್ಟು ಒಗ್ಗಟ್ಟು ಪ್ರದರ್ಶಿಸಬೇಕು. ಕೇವಲ ಬಾಯಿಯ ಚಪಲಕ್ಕೆ ಮಾತನಾಡುವ ಅವರು ದೇಶಕ್ಕೆ ಹಾಗೂ ದೇಶದ ಸೈನಿಕರಿಗೆ ಗೌರವ ನೀಡುವುದನ್ನು ಕಲಿಯಬೇಕು. ನೆರೆಯ ಪಾಕಿಸ್ತಾನ ಉಗ್ರರನ್ನು ಪೋಷಣೆ ಮಾಡುವ ಮೂಲಕ ಭಾರತದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ದೇಶದ ಅಮಾಯಕ ಹಿಂದು ಪ್ರವಾಸಿಗರನ್ನು ಹತ್ಯೆಗೈದ ಉಗ್ರರಿಗೆ ಆಪರೇಷನ್ ಸಿಂದೂರ್ ಮೂಲಕ ಭಾರತದ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಜೊತೆಗೆ ದೇಶದೊಳಗೇ ಇದ್ದು ದೇಶದ್ರೋಹಿ ಕೆಲಸಕ್ಕೆ ಮುಂದಾಗುತ್ತಿರುವವರ ವಿರುದ್ದವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ರೈತ ಹೋರಾಟಗಾರ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ಉಗ್ರರ ಅಟ್ಟಹಾಸ ಮಿತಿ ಮೀರಿದ್ದು ಅವರನ್ನು ಮಟ್ಟ ಹಾಕಬೇಕೆಂದರೆ ಭಾರತದ ಸೈನಿಕರಿಂದ ಮಾತ್ರ ಸಾಧ್ಯ. ಮುಂದೆ ನಮ್ಮ ಮಕ್ಕಳು ನೆಮ್ಮದಿಯಿಂದ ಇರಬೇಕು ಎಂದರೆ ನಾವೆಲ್ಲರೂ ದೇಶದ ಸೈನಿಕರ ಜೊತೆ ಇದ್ದೇವೆ ಎಂಬ ಬೆಂಬಲದೊಂದಿಗೆ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದರು.