ಹೊಸದಿಗಂತ ಹಾಸನ :
ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡರು ಹೊತ್ತಿ ಉರಿದ ಘಟನೆ ಸಕಲೇಶಪುರ ತಾಲ್ಲೂಕಿನ, ಶಿರಾಡಿಘಾಟ್ ರಸ್ತೆಯ, ಎತ್ತಿನಹಳ್ಳ ಬಳಿ ಮುಂಜಾನೆ ಸಂಭವಿಸಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ.
ಬೆಂಗಳೂರಿನಿಂದ ಸುಬ್ರಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೆ ಶ್ರೀ ಹೆಸರಿನ ಸ್ಲೀಪಿಂಗ್ ಕೋಚ್ ಎಸಿ ಬಸ್ ಸುಮಾರು ಮೂವತ್ತು ಪ್ರಯಾಣಿಕರನ್ನು ಹೊತ್ತು ಸಾಗುತ್ತಿತ್ತು. ಶಿರಾಡಿಘಾಟ್ ರಸ್ತೆಯಲ್ಲಿ ತೆರಳುವಾಗ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿತು.ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಸಿದ ಚಾಲಕ ಯೋಗೀಶ್ ಎಲ್ಲರ ಪ್ರಾಣ ಉಳಿಸಿದ್ದಾರೆ.
ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣ ಸುಟ್ಟು ಕರಕಲಾಯಿತು. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತೆರಳಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಅಷ್ಡರಲ್ಲಿ ಬಸ್ ಸಂಪೂರ್ಣ ಸುಟ್ಟು ಹೋಗಿತ್ತು. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಲ್ಲರನ್ನೂ ಬದಲಿ ಬಸ್ಸುಗಳಲ್ಲಿ ಕಳುಹಿಸಲಾಗಿದೆ.