ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆ 4 ತಂಡಗಳನ್ನು ರಚಿಸಲಾಗಿದೆ. ಮಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಜನತೆ ಶಾಂತಿ ಕಾಪಾಡಬೇಕೆಂದು ಗೃಹ ಸಚಿವ ಪರಮೇಶ್ವರ್ ಮನವಿ ಮಾಡಿದ್ದಾರೆ.
ಯಾರು ಈ ಕೆಲಸ ಮಾಡಿದ್ದಾರೆ ಅವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಮಂಗಳೂರಿನಲ್ಲಿ ನಡೆದ ಎರಡು ಕೊಲೆ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜನರು ಶಾಂತಿ ಕಾಪಾಡಬೇಕು. ಸರ್ಕಾರ ನಿಮ್ಮ ಜೊತೆಗಿದೆ. ಪೊಲೀಸ್ ಇಲಾಖೆಯೂ ನಿಮ್ಮ ಜೊತೆಗಿದೆ. ಈಗಾಗಲೇ ಹಿರಿಯ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ಆಗಬಾರದು. ಘಟನೆಯ ಬಗ್ಗೆ ವರದಿ ಕೇಳಲಾಗಿದೆ ಎಂದಿದ್ದಾರೆ.
ಇಂತಹ ಘಟನೆಗಳನ್ನು ಯಾವ ಕಾರಣಕ್ಕೂ ಬೆಳೆಯುವುದಕ್ಕೆ ಬಿಡುವುದಿಲ್ಲ. ಯಾವುದೇ ರಾಜಕೀಯ ಪಕ್ಷ ಆದರೂ ಆರೋಪಿಗಳನ್ನು ಬಿಡುವುದಿಲ್ಲ. ಯಾವ ಸರ್ಕಾರವೂ ಕೂಡಾ ಕೊಲೆ ಆಗುವುದಕ್ಕೆ ಬಯಸುವುದಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಜವಾಬ್ದಾರಿ. ಯಾವುದೇ ಇಂತಹ ಘಟನೆಗಳು ಮುಂದೆ ಆಗಲು ಬಿಡುವುದಿಲ್ಲ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.