ಹೊಸದಿಗಂತ ವರದಿ, ಕೊಡಗು:
ಹುದಿಕೇರಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ವಿಧಾನ ಪರಿಷತ್ ನೂತನ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಹುದಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಮಂಡೇಪಂಡ ಸುಜಾ ಕುಶಾಲಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಪಕ್ಷ ವ್ಯಕ್ತಿ ಅಥವಾ ಗುಂಪಿನ ಪಕ್ಷವಲ್ಲ, ತನ್ನದೇ ಆದ ಸಿದ್ಧಾಂತದ ಮೇಲೆ ರಾಷ್ಟ್ರೀಯತೆಯಿಂದ ನೆಲೆನಿಂತ ಪಕ್ಷ. ಹೀಗಾಗಿ ದೇಶದಲ್ಲಿ ಪಕ್ಷ ಅಧಿಕಾರದಲ್ಲಿದೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಪಕ್ಷದ ಕಾರ್ಯಕರ್ತರ ಶ್ರಮ, ಪಂಚಾಯಿತಿ ಜನ ಪ್ರತಿನಿಧಿಗಳ ಸಹಕಾರದಿಂದ ಈ ಬಾರಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡುವುದಾಗಿ ಭರವಸೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬೀನ್ ದೇವಯ್ಯ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸುಭದ್ರವಾಗಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಮತ್ತಷ್ಟು ಬಲಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಪಕ್ಷ ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಸಬೇಕೆಂದು ತಿಳಿಸಿದರು.
ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಅರುಣ್ ಅಪ್ಪಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟಿರ ಪ್ರವೀಣ್, ಉಪಾಧ್ಯಕ್ಷ ಚೋಡುಮಾಡ ಶ್ಯಾಮ್ ಪೂಣಚ್ಚ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುಂಞಂಗಡ ಅರುಣ್ ಭೀಮಯ್ಯ, ಖಜಾಂಚಿ ಚೆಪ್ಪುಡಿರ ಮಾಚು ಸೇರಿದಂತೆ ಹಿರಿಯರಾದ ಚಕ್ಕೆರ ಕಾಳಯ್ಯ, ಅಳಮೇಂಗಡ ಮುದ್ದಪ್ಪ ಭಾಗವಹಿಸಿದ್ದರು.
ಜಿಲ್ಲಾ ಸಮಿತಿ ಸದಸ್ಯ ಮಂಡೆಚಂಡ ದಿನೇಶ್ ಚಿಟ್ಯಪ್ಪ ನಿರೂಪಿಸಿ, ಸ್ವಾಗತಿಸಿದರು. ಶಕ್ತಿ ಕೇಂದ್ರದ ಪ್ರಮುಖ್ ಬೊಜ್ಜಂಗಡ ಸುನಿಲ್ ವಂದಿಸಿದರು.
ಸಭೆಯಲ್ಲಿ ಗ್ರಾ.ಪಂ.ಅಧ್ಯಕ್ಷರು, ಸದಸ್ಯರು ಸೇರಿದಂತೆ ಪಕ್ಷದ ನಾಯಕರು ಉಪಸ್ಥಿತರಿದ್ದರು.