ಹೊಸದಿಗಂತ ವರದಿ, ಕಾರವಾರ:
ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಆಗುತ್ತಿರುವ ಕಟ್ಟಡ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದ್ದು , ತ್ವರಿತವಾಗಿ ಕಟ್ಟಡ ಕಾರ್ಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಹೇಳಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡದಲ್ಲಿ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಚಿಕಿತ್ಸೆ ಸೇರಿದಂತೆ ಇನ್ನಿತರ ವೈದ್ಯಕೀಯ ಸೇವೆಗಳು ಲಭ್ಯವಾಗಲಿವೆ ಎಂದು ತಿಳಿಸಿದರು.
ಅಂಕೋಲಾ ತಾಲೂಕಿನ ಹಟ್ಟಿಕೇರಿಯಲ್ಲಿ ಕ್ರಿಟಿಕಲ್ ಕೇರ್ ಸೆಂಟರ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಮಾಡಲಾಗಿದ್ದು ಅದು ಸೂಕ್ತ ಸ್ಥಳವಾಗಿದೆ ಎಂದ ಅವರು ಜಿಲ್ಲೆಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಅವಶ್ಯಕವಾಗಿದ್ದು ಅದು ಎಲ್ಲಿ ನಿರ್ಮಾಣ ಆದರೂ ಅತಿ ಶೀಘ್ರದಲ್ಲಿ ನಿರ್ಮಾಣ ಆಗಬೇಕು ಎಂದರು.
ಅಂಕೋಲಾ ತಾಲೂಕಿನ ಬೆಲೇಕೇರಿ ಬಂದರು ವ್ಯಾಪ್ತಿಯಲ್ಲಿ ಸ್ಥಳೀಯ ಮೀನುಗಾರರಿಗೆ ಮೀನು ಒಣಗಿಸಲು ಮತ್ತು ಬಲೆ ಇಡಲು ಅವಕಾಶ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕಿ ರೂಪಾಲಿ ನಾಯ್ಕ ಅವರು ಆಗ್ರಹಿಸಿದರು.
2021-22 ರ ಬಜೆಟ್ಟಿನಲ್ಲಿ ಖಾರ್ಲೆಂಡ್ ನಿರ್ಮಾಣಕ್ಕೆ ಟೆಂಡರ್ ಆದರೂ ಇದುವರೆಗೆ ಆದೇಶ ಪ್ರತಿಯನ್ನು ವಿತರಿಸಲಾಗಿಲ್ಲ ಇದರಿಂದಾಗಿ ಕಾಮಗಾರಿ ಪ್ರಾರಂಭವಾಗದೇ ಕೃಷಿ ಚಟುವಟಿಕೆ ಗಳಿಗೆ ಸಮಸ್ಯೆಯಾಗುತ್ತಿದೆ ಸಂಬಂದಿಸಿದ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಜಿಲ್ಲಾ ಕೇಂದ್ರದಲ್ಲಿ ಲಭ್ಯವಿರುವುದಿಲ್ಲ ಎಂದು ಶಾಸಕಿ ರೂಪಾಲಿ ನಾಯ್ಕ ಅಸಮಾಧಾನ ವ್ಯಕ್ತಪಡಿಸಿದರು.