ರಾಜ್ಯದಲ್ಲಿ ಕುಟುಂಬವಾದ, ಭ್ರಷ್ಟಾಚಾರವನ್ನು ದೂರವಿಡಲು ಬಿಜೆಪಿಯನ್ನು ಬೆಂಬಲಿಸಿ: ಅಮಿತ್ ಶಾ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖ. ರಾಜ್ಯದಲ್ಲಿ ಕುಟುಂಬವಾದ, ಭ್ರಷ್ಟಾಚಾರವನ್ನು ದೂರವಿಡಲು ಬಿಜೆಪಿ ಬೆಂಬಲಿಸಿ ಎಂದು ಕೇಂದ್ರ ಗೃಹ ಮತ್ತು ಸಹಕಾರ ಖಾತೆ ಸಚಿವ ಅಮಿತ್ ಶಾ ಅವರು ಕರೆ ನೀಡಿದ್ದಾರೆ .

ಬೆಂಗಳೂರಿನಲ್ಲಿ ಇಂದು ಬಿಜೆಪಿ ಬೂತ್ ವಿಜಯ ಸಂಕಲ್ಪ ಸಮಾವೇಶವನ್ನ ಉದ್ಘಾಟಿಸಿ ಮಾತನಾಡಿದ ಅವರು, ಪಿಎಫ್‍ಐ ಬೆಂಬಲಿಗರ ಜೊತೆ ಇರಬೇಕೇ ಅಥವಾ ದೇಶವನ್ನು ಕಾಪಾಡುವ, ರಾಮಮಂದಿರ ನಿರ್ಮಿಸುವ ಪಕ್ಷದ ಜೊತೆ ನಿಲ್ಲಬೇಕೇ ಎಂದು ಜನರು ತೀರ್ಮಾನ ಮಾಡಬೇಕು. ಟಿಪ್ಪು ಸುಲ್ತಾನನನ್ನು ಹೀರೋ ಮಾಡುವವರನ್ನು ದೂರವಿಡಿ ಎಂದು ಮನವಿ ಹೇಳಿದರು.

ರಾಜ್ಯದಲ್ಲಿ ಮತ್ತೆ ನಾವು ಸ್ಪಷ್ಟ ಬಹುಮತದೊಂದಿಗೆ ಗೆದ್ದು ಆಡಳಿತ ನಡೆಸಲಿದ್ದೇವೆ. ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷದ ಜೊತೆ ನಾವು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿದರು.

ಯಡಿಯೂರಪ್ಪ- ಬೊಮ್ಮಾಯಿ ಜೋಡಿ ಬೆಂಗಳೂರು ವಿಕಾಸಕ್ಕಾಗಿ 2 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ತಂದಿದ್ದಾರೆ . ಬೆಂಗಳೂರಿನ ಕನಸಿನ ನಗರ– ವಿಮಾನನಿಲ್ದಾಣ ನಡುವಿನ ಮೆಟ್ರೋ ರೈಲು ಸಂಪರ್ಕ ಕಾಮಗಾರಿ ನಡೆದಿದೆ. ಈ ಮೂಲಕ ಟ್ರಾಫಿಕ್ ಸಮಸ್ಯೆ ನಿವಾರಿಸಿದ್ದೇವೆ ಎಂದು ಹೇಳಿದರು.

ಪ್ರದಾನಿ ಮೋದಿ ಅವರ ಕೈಯಲ್ಲಿ ದೇಶ ಸುರಕ್ಷಿತವಾಗಿ ಇದೆ. ಆದ್ರೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕುಮಾರಸ್ವಾಮಿ ಮತಬ್ಯಾಂಕಿಗಾಗಿ ಪಿಎಫ್‍ಐ, ಭಯೋತ್ಪಾದನೆಯನ್ನು ಬೆಂಬಲಿಸುತ್ತಾರೆ. ಆದರೆ, ನಾವು ಹಾಗಲ್ಲ. ದೇಶದ ಸುರಕ್ಷತೆ, ಸರ್ವತೋಮುಖ ಅಭಿವೃದ್ಧಿ ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲಿಸಬೇಕಿದೆ ಎಂದು ತಿಳಿಸಿದರು.

ಗುಜರಾತ್ ಸೇರಿ 7 ರಾಜ್ಯಗಳ ಚುನಾವಣೆಯಲ್ಲಿ 5 ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ನೆಲಕಚ್ಚಿದೆ. ಗುಜರಾತ್‍ನಲ್ಲಿ ವಿಪಕ್ಷ ಸ್ಥಾನಮಾನವನ್ನೂ ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಅವರು ನೆನಪಿಸಿದರು.

ಕೇಂದ್ರ- ರಾಜ್ಯ ಸರಕಾರಗಳ ಸಾಧನೆ ಮತ್ತು ಸಫಲತೆಯೊಂದಿಗೆ ನಾವು ಕರ್ನಾಟಕದಲ್ಲಿ ಚುನಾವಣೆ ಎದುರಿಸಲಿದ್ದೇವೆ. ನರೇಂದ್ರ ಮೋದಿಜಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರ ಜನಪರ ಯೋಜನೆಗಳನ್ನು ಜನರಿಗೆ ತಿಳಿಸಬೇಕು. ಮೋದಿಜಿ ಅವರು ಚುನಾವಣೆಗೆ ಸನ್ನದ್ಧರಾಗಿದ್ದಾರೆ. ಆದರೆ, ಅವರ ಸಾಧನೆಗಳನ್ನು ಬೂತ್ ಕಾರ್ಯಕರ್ತರು ಜನರಿಗೆ ತಿಳಿಸಬೇಕಿದೆ ಎಂದು ಮನವಿ ಮಾಡಿದರು.

ಇದೇ ವೇಳೆ ಸರಕಾರದ ಸಾಧನೆಗಳನ್ನು ತೆರೆದಿಟ್ಟ ಶಾ , 40 ಕೋಟಿಗೂ ಹೆಚ್ಚು ಜನರಿಗೆ ಜನಧನ್ ಖಾತೆ, ಕೋಟಿಗಟ್ಟಲೆ ಶೌಚಾಲಯ ನಿರ್ಮಾಣ, ಬಡವರ ಮನೆಗೆ ಸಿಲಿಂಡರ್ ಸಂಪರ್ಕ, 5 ಲಕ್ಷ ವಿಮೆ- ಇವೆಲ್ಲವೂ ನಮ್ಮ ಸರಕಾರದ ಸಾಧನೆಗಳು . ಚೀನಾದಲ್ಲಿ ಮತ್ತೆ ಕೋವಿಡ್ ಹರಡುತ್ತಿದೆ. ಆದರೆ, ಮೋದಿಜಿ ಸರಕಾರವು 130 ಕೋಟಿ ಜನರಿಗೆ ಉಚಿತ ಕೋವಿಡ್ ಲಸಿಕೆ ನೀಡಿ ಕೋವಿಡ್‍ಮುಕ್ತ ದೇಶವನ್ನಾಗಿ ಮಾಡಿದೆ ಎಂದರು.

ಕಾಂಗ್ರೆಸ್ ಪಕ್ಷದವರು ಹೊಸ ವಿಚಾರಗಳನ್ನು ತಂದು ಮತ ಕೇಳುತ್ತಾರೆ. ಕಾಂಗ್ರೆಸ್ಸಿಗೆ ಆಡಳಿತವು ಭ್ರಷ್ಟಾಚಾರಕ್ಕೆ ಸಾಧನ. ಗೆದ್ದರೆ ರಾಜ್ಯವನ್ನು ಎಟಿಎಂ ಮಾಡಿಕೊಳ್ಳುತ್ತಾರೆ ಎಂದು ನೆನಪಿಸಿದರು.
ಜೆಡಿಎಸ್- ಕಾಂಗ್ರೆಸ್ ಚುನಾವಣೆಯಲ್ಲಿ ಎದುರಾಳಿ ಆಗಿದ್ದರೂ ಬಳಿಕ ಬಿಜೆಪಿ ಎದುರು ಬಂದಾಗ ಜೊತೆಗೂಡುತ್ತವೆ. 2018ರಲ್ಲೂ ಹೀಗೇ ಆಗಿತ್ತು. ಬಳಿಕ ಭ್ರಷ್ಟಾಚಾರದಿಂದ ಸಮ್ಮಿಶ್ರ ಸರಕಾರ ಕುಸಿದು ಬಿತ್ತು. ಬಳಿಕ ಯಡಿಯೂರಪ್ಪ, ಬೊಮ್ಮಾಯಿಯವರ ನೇತೃತ್ವದಲ್ಲಿ ನಾವು ಉತ್ತಮ ಆಡಳಿತ ಕೊಟ್ಟಿದ್ದೇವೆ ಎಂದು ತಿಳಿಸಿದರು.

ವಿಮಾನನಿಲ್ದಾಣದ ಟರ್ಮಿನಲ್ 2 ಉದ್ಘಾಟನೆ, ಕೆಂಪೇಗೌಡರ ಬೃಹತ್ ಪ್ರತಿಮೆ ಉದ್ಘಾಟನೆ ಆಗಿದೆ. ಬೆಂಗಳೂರಿನಲ್ಲಿ ನಾವು 20ಕ್ಕೂ ಹೆಚ್ಚು ಸ್ಥಾನ ಗೆದ್ದು ಕರ್ನಾಟಕದಲ್ಲಿ ಬಿಜೆಪಿ ಬಹುಮತ ಪಡೆಯುವಂತೆ ಮಾಡಬೇಕಿದೆ ಎಂದರು.ಬೂತ್ ಸಶಕ್ತೀಕರಣ ಕೆಲಸ ನಿಮ್ಮದು. ದೇಶ ಸಶಕ್ತವಾಗಿ ಮಾಡುವ ಕೆಲಸ ಮೋದಿಜಿ ಅವರದು. ಸಾಮರ್ಥ್ಯವಂತ ದೇಶಕ್ಕಾಗಿ ಬಿಜೆಪಿ ಬೆಂಬಲಿಸಿ ಎಂದು ಕರೆ ನೀಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಇಲಾಖೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಕರ್ನಾಟಕದ ಸಹ ಉಸ್ತುವಾರಿ ಶ್ರೀಮತಿ ಡಿ.ಕೆ. ಅರುಣಾ, ರಾಜ್ಯದ ಸಚಿವರು, ಶಾಸಕರು, ಪಕ್ಷದ ಮುಖಂಡರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!