ಹೊಸದಿಗಂತ ಡಿಜಿಟಲ್ ಡೆಸ್ಕ್
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ವಿವಾದಿತ ಹೇಳಿಕೆ ನೀಡಿದ್ದು, ಕರ್ನಾಟಕದ ಗಡಿ ಪ್ರದೇಶಗಳಲ್ಲಿ ನೆಲೆಸಿರುವ ಮರಾಠಿ ಮಾತನಾಡುವ ಜನರು ತಮ್ಮ ಸ್ಥಳಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಹೋರಾಟವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
ಮಹಾರಾಷ್ಟ್ರದ ಸಂಸ್ಥಾಪನಾ ದಿನದ ಅಂಗವಾಗಿ ಪುಣೆಯಲ್ಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿರುವ ಅವರು, ಮಹಾರಾಷ್ಟ್ರ ರಚನೆಯಾಗಿ 62ನೇ ವರ್ಷಾಚರಣೆ ಮಾಡುತ್ತಿದ್ದೇವೆ. ಆದರೆ, ಕರ್ನಾಟಕದ ಬೀದರ್, ಭಾಲ್ಕಿ, ಬೆಳಗಾವಿ, ಕಾರವಾರ, ನಿಪ್ಪಾಣಿ ಮತ್ತು ಇತರ ಸ್ಥಳಗಳ ಮರಾಠಿ ಭಾಷಿಕ ಗ್ರಾಮಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಲು ಸಾಧ್ಯವಾಗದ ಬಗ್ಗೆ ವಿಷಾದಿಸುತ್ತಿದ್ದೇವೆ ಎಂದಿದ್ದಾರೆ.
ಮರಾಠಿ ಭಾಷಿಕರು ಇರುವ ಸ್ಥಳಗಳು ಮಹಾರಾಷ್ಟ್ರದ ಭಾಗವಾಗಲು ನಡೆಸುವ ಹೋರಾಟವನ್ನು ಮಹಾರಾಷ್ಟ್ರ ಸರ್ಕಾರ ತನ್ನ ಬೆಂಬಲವನ್ನು ಮುಂದುವರೆಸಲಿದೆ. ಈ ಗ್ರಾಮಗಳು ಮಹಾರಾಷ್ಟ್ರದ ಭಾಗವಾಗುವವರೆಗೆ ಆ ಪ್ರದೇಶದ ಜನರ ಹೋರಾಟವನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿವಾದವು ಸುಪ್ರೀಂಕೋರ್ಟ್ ಮುಂದೆ ಇದ್ದರೂ, ಇಂತಹ ವಿವಾದಿತ ಹೇಳಿಕೆಯನ್ನು ಡಿಸಿಎಂ ಅಜಿತ್ ಪವಾರ್ ನೀಡಿದ್ದಾರೆ.