ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಪತ್ರಕರ್ತ ಸಿದ್ಧಿಕ್ ಕಪ್ಪನ್ಗೆ ಸುಪ್ರೀಂಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಈ ವೇಳೆ ಕಪ್ಪನ್ಗೆ ಆರು ವಾರಗಳ ಕಾಲ ದೆಹಲಿಯಲ್ಲಿದ್ದು, ನಂತರ ಕೇರಳಕ್ಕೆ ಹೋಗಬಹುದು ಎಂದು ಸರ್ವೋಚ್ಛ ನ್ಯಾಯಾಲಯ ನಿರ್ದೇಶಿಸಿದೆ.
ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ದಲಿತ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣ ಸಂಬಂಧ 2020ರ ಅಕ್ಟೋಬರ್ 5 ರಂದು ಸಿದ್ಧಿಕ್ ಕಪ್ಪನ್ ಮತ್ತು ಇತರರು ಹತ್ರಾಸ್ಗೆ ಹೋಗುತ್ತಿದ್ದಾಗ ಪೊಲೀಸರು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಬಂಧಿಸಿದ್ದರು.
ಬಳಿಕ ಜಾಮೀನು ಕೋರಿ ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠದಲ್ಲಿ ಸಿದ್ಧಿಕ್ ಕಪ್ಪನ್ ಅರ್ಜಿ ಸಲ್ಲಿಸಿದ್ದರು. ಆದರೆ, ಕಪ್ಪನ್ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ಪೀಠ ತಿರಸ್ಕರಿಸಿತ್ತು. ಹೀಗಾಗಿ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ಇಂದು ಸಿದ್ಧಿಕ್ ಕಪ್ಪನ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಪೀಠವು ವಾದ ಪ್ರತಿವಾದ ಆಲಿಸಿ , ಜಾಮೀನು ನೀಡಿದೆ.