ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ (K Kavitha) ಅವರು ಜಾರಿ ನಿರ್ದೇಶನಾಲಯ (ED) ನೀಡಿರುವ ಸಮನ್ಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು ಯಾವುದೇ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿದೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿಗೆ ಇಡಿ ಸಮನ್ಸ್ ನೀಡಿತ್ತು. ಕವಿತಾ ಅವರು ತಮ್ಮ ಮನವಿಯಲ್ಲಿ, ಇಡಿ ತನಗೆ ನೀಡಿದ ಸಮನ್ಸ್ ಪ್ರಶ್ನಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಕೋರಿದ್ದಾರೆ. ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ಪತ್ನಿ ನಳಿನಿ ಚಿದಂಬರಂ ಅವರು ಸಲ್ಲಿಸಿರುವ ಇದೇ ರೀತಿಯ ಅರ್ಜಿಯು ಜಾರಿ ನಿರ್ದೇಶನಾಲಯ (ಇಡಿ) ನಿಂದ ಆರೋಪಿತರಾಗಿರುವ ಮಹಿಳೆಯರಿಗೆ ಸಮನ್ಸ್ ನೀಡುವ ವಿಚಾರವಾಗಿ ವಿಚಾರಣೆಗೆ ಬಾಕಿ ಇದೆ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಪೀಠಕ್ಕೆ ತಿಳಿಸಿದ್ದಾರೆ.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್ಜಿ) ಎಸ್ವಿ ರಾಜು, ನಳಿನಿ ಚಿದಂಬರಂ ಅವರ ಅರ್ಜಿಯನ್ನು ಸಲ್ಲಿಸಿದ ನಂತರ, ತ್ರಿಸದಸ್ಯ ಪೀಠವು ಮನಿ ಲಾಂಡರಿಂಗ್ ತಡೆ ಕಾಯ್ದೆಯ ನಿಬಂಧನೆಗಳನ್ನು ಎತ್ತಿಹಿಡಿದು ತೀರ್ಪು ನೀಡಿದೆ.
ನ್ಯಾಯಮೂರ್ತಿ ಅಜಯ್ ರಸ್ತೋಗಿ ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಪೀಠವು ಎಲ್ಲಾ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೇಳಿದ್ದು ಮೂರು ವಾರಗಳ ನಂತರ ವಿಚಾರಣೆ ನಡೆಸಲಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣೆಗಾಗಿ ಕವಿತಾ ಮೂರು ಬಾರಿ ಇಡಿ ಮುಂದೆ ಹಾಜರಾಗಿದ್ದಾರೆ.