ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕಿ, ಮಾಜಿ ಎಂಎಲ್ಸಿ ಎ.ವಿ. ಗಾಯತ್ರಿ ಶಾಂತೇಗೌಡ ಅವರ ನಿವಾಸಕ್ಕೆ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿರುವ ಅವರ ನಿವಾಸ ಹಾಗೂ ಕಚೇರಿ, ಬೇಲೂರು ರಸ್ತೆಯಲ್ಲಿರುವ ಇನ್ನೊಂದು ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು, ತೀವ್ರ ತಪಾಸಣೆಯಲ್ಲಿ ತೊಡಗಿದ್ದಾರೆ.
ಗಾಯತ್ರಿ ಅವರ ಕುಟಂಬದವರನ್ನೂ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮುನ್ನಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಐಟಿ ದಾಳಿ ವಿಷಯ ತಿಳಿಯುತ್ತಿದ್ದಂತೆ ಗಾಯತ್ರಿ ಶಾಂತೇಗೌಡ ಅವರ ಮನೆ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಐಟಿ ಇಲಾಖೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಇದು ಸಿ.ಟಿ. ರವಿ ಅವರ ಕೆಲಸ ಎಂದು ಆರೋಪಿಸಿದ್ದಾರೆ.