ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಒದಗಿಸಲು ಕ್ರಮ ಕೈಗೊಳ್ಳಿ: ಅಪ್ಪಚ್ಚುರಂಜನ್

ಹೊಸದಿಗಂತ ವರದಿ ಕುಶಾಲನಗರ:

ನಂಜರಾಯಪಟ್ಟಣ ಮತ್ತು ವಿರೂಪಾಕ್ಷಪುರದ ಅರಣ್ಯ ಹಕ್ಕು ಸಮಿತಿ ಸಭೆ ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಅರಣ್ಯ ಹಕ್ಕು ಸಮಿತಿಯ ನಿಯಮಾನುಸಾರವಾಗಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ಒದಗಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಭೆಯಲ್ಲಿದ್ದ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕ ಎಂ ಪಿ ಅಪ್ಪಚ್ಚುರಂಜನ್, ವಿರೂಪಾಕ್ಷಪುರದಲ್ಲಿ ಈಗಾಗಲೇ ಸರ್ವೆ ಕಾರ್ಯ‌ ಮುಗಿದಿದ್ದು, ಸರ್ವೆಯ ನಕ್ಷೆಯ ವರದಿ‌ ‌ ಲಭಿಸಿದ‌ ಬಳಿಕ ಮುಂದಿನ ಹಂತದ ಪ್ರಕ್ರಿಯೆ ಸುಗಮವಾಗಲಿದೆ. ಬಡ ಕೂಲಿ‌ ಕಾರ್ಮಿಕ ಫಲಾನುಭವಿಗಳು ಸರಕಾರದ ಸೌಲಭ್ಯಗಳ ಬಗ್ಗೆ ಅರಿತುಕೊಂಡು ಸದ್ಬಳಕೆ‌ ಮಾಡಿಕೊಳ್ಳಬೇಕಿದೆ. ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯಯುತ ಜೀವನಕ್ಕೆ‌ ಒತ್ತು‌ ನೀಡಬೇಕು ಎಂದರು.

ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಅಧ್ಯಕ್ಷ ಸಿ.ಎಲ್.ವಿಶ್ವ ಮಾತನಾಡಿ, ಶಾಸಕರ ಕಾಳಜಿಯಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಜನರ ಕನಸು ನನಸಾಗಲಿದೆ ಎಂದು ಧನ್ಯವಾದ ಸಲ್ಲಿಸಿದರು. ಸದಸ್ಯ ಆರ್.ಕೆ.ಚಂದ್ರ ಮಾತನಾಡಿ, ರಾಜಕೀಯ ಇತಿಹಾಸದಲ್ಲಿ ಇದುವರೆಗೆ ಯಾವುದೇ ಶಾಸಕ ಮೂರು‌ ಬಾರಿ ವಿರೂಪಾಕ್ಷಪುರಕ್ಕೆ ಭೇಟಿ ನೀಡಿದ ಇತಿಹಾಸವಿಲ್ಲ. ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಅವರು ಖುದ್ದು ತಾವೇ ಮುಂದೆ ನಿಂತು ಅಗತ್ಯ ಸಲಹೆ, ಮಾರ್ಗದರ್ಶನ ನೀಡುವ ಮೂಲಕ ಅರಣ್ಯ‌ ಹಕ್ಕು‌ ಸಮಿತಿ ರಚಿಸಿ ಫಲಾನುಭವಿಗಳ ಬಾಳಿಗೆ ಬೆಳಕಾಗಿದ್ದಾರೆ ಎಂದರು.

ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ, ಗ್ರಾಮ ಪಂಚಾಯತಿ ‌ ಅಭಿವೃದ್ಧಿ ಅಧಿಕಾರಿ ಕಲ್ಪಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಗ್ರವಾದ ಮಾಹಿತಿಯನ್ನು ಸಭೆಗೆ ಒದಗಿಸಿದರು. ಸಭೆಯಲ್ಲಿ ತಾಲೂಕು ಸಮಾಜ‌ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಪ್ಪ, ಉಪ ವಲಯ ಅರಣ್ಯಾಧಿಕಾರಿ ಸುಬ್ರಾಯ, ಅರಣ್ಯ ಹಕ್ಕು ಸಮಿತಿ‌ ಅಧ್ಯಕ್ಷ ಗಿರೀಶ್, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಸಮೀರ, ಸದಸ್ಯರಾದ ಗಿರಿಜಮ್ಮ, ಲೋಕನಾಥ್, ಕಂದಾಯಾಧಿಕಾರಿ ಸಂತೋಷ್, ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಾಮದ ನೂರಾರು ಪ್ರಮುಖರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!