ಹೊಸ ದಿಗಂತ ವರದಿ, ಕಲಬುರಗಿ:
ರಾಜ್ಯದಲ್ಲಿ ಲಂಬಾಣಿ ಸಮುದಾಯ ವಾಸಿಸುವ ತಾಂಡಾ ಮತ್ತು ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುತ್ತಿದ್ದು, ಪ್ರಾಯೋಗಿಕವಾಗಿ ಕಲಬುರಗಿ ಜಿಲ್ಲೆಯಿಂದಲೆ ಇದಕ್ಕೆ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಅರ್.ಅಶೋಕ ಘೋಷಿಸಿದರು.
ಶನಿವಾರ ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮ ಅಂಗವಾಗಿ ಜಿಲ್ಲೆಯ ಸೇಡಂ ತಾಲೂಕಿನ ಆಡಕಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಆಯೋಜಿಸಿದ ಗ್ರಾಮ ವಾಸ್ತವ್ಯ ಮತ್ತು ಸೌಲಭ್ಯ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಲಬುರಗಿ ಜಿಲ್ಲೆಯ 453 ತಾಂಡಾಗಳನ್ನು ಪೈಲೇಟ್ ಯೋಜನೆಯಡಿ ಕೈಗೆತ್ತಿಕೊಂಡು ಕಂದಾಯ ಗ್ರಾಮಗಳನ್ನಾಗಿ ಮುಂದಿನ ಎರಡು ತಿಂಗಳಲ್ಲಿ ಮಾಡಲಾಗುವುದು. ಇದಲ್ಲದೆ ಪ್ರಸ್ತುತ ತಾಂಡಾ, ಹಟ್ಟಿಯಲ್ಲಿ (ಶಾಲಾ-ಕಾಲೇಜು, ಸ್ಮಶಾನ ಹೊರತುಪಡಿಸಿ) ಅನಧಿಕೃತವಾಗಿ ವಾಸಿಸುವರನ್ನು ಅಧಿಕೃತಗೊಳಿಸಿ ಎಷ್ಟು ವಿಸ್ತೀರ್ಣದಲ್ಲಿ ಇದ್ದಾರೆ ಅಷ್ಟು ಜಾಗದ ನಿವೇಶನ, ಮನೆ ಅವರ ಹೆಸರಿಗೆ ನೋಂದಣಿ ಮಾಡಿಸಿ ಮನೆ ಕಟ್ಟಲು ಆರ್ಥಿಕ ಸಹಾಯಧನ ನೀಡಲಾಗುವುದು. ರಾಜ್ಯದಲ್ಲಿ ಏಕಕಾಲದಲ್ಲಿ 30 ಸಾವಿರ ಜನರಿಗೆ ಹಕ್ಕು ಪತ್ರ ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.