ಶಿಕ್ಷಕರ ನೇಮಕಾತಿ ಹಗರಣ: ಇಡಿ ವಿಚಾರಣೆಗೆ ಹಾಜರಾಗಲ್ಲ ಎಂದ ಅಭಿಷೇಕ್ ಬ್ಯಾನರ್ಜಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಕ್ಟೋಬರ್​ 3 ರಂದು ನವದೆಹಲಿಯ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಅದರ ಬದಲಾಗಿ ಅಭಿಷೇಕ್ ಅಕ್ಟೋಬರ್ 2-3 ರಂದು ದೆಹಲಿಯಲ್ಲಿ ಪಕ್ಷದ ಧರಣಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾರಾಗುವಂತೆ ಇಡಿ ಅಭಿಷೇಕ್​ರಿಗೆ ನೋಟಿಸ್ ನೀಡಿತ್ತು. ಆದರೆ ಅ.3 ರ ವಿಚಾರಣೆಗೆ ತಾವು ಹಾಜರಾಗುತ್ತಿಲ್ಲ ಎಂದು ತೃಣಮೂಲ ಪಕ್ಷದ ಸಂಸದರೂ ಆಗಿರುವ ಅಭಿಷೇಕ್ ಬ್ಯಾನರ್ಜಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದಕ್ಕೂ ಮುನ್ನ ಸೆಪ್ಟೆಂಬರ್ 13 ರಂದು ಇಡಿ ಎದುರು ಅಭಿಷೇಕ್ ಬ್ಯಾನರ್ಜಿ ಹಾಜರಾಗಿದ್ದರು. ಆದರೆ ಆ ಸಮಯದಲ್ಲಿ ಅವರು ತಮ್ಮ ಪೂರ್ವನಿಗದಿತ ಎಲ್ಲ ಕಾರ್ಯಕ್ರಮಗಳನ್ನು ಬಿಟ್ಟು ವಿಚಾರಣೆಗೆ ಹಾಜರಾಗಿದ್ದರು.

“ಎಲ್ಲ ಅಡೆತಡೆಗಳ ಹೊರತಾಗಿಯೂ ಪಶ್ಚಿಮ ಬಂಗಾಳದ ಸಮಸ್ಯೆಗಳ ನಿವಾರಣೆಗೆ ಮತ್ತು ರಾಜ್ಯಕ್ಕೆ ಸಿಗಬೇಕಾದ ನ್ಯಾಯಯುತವಾದ ಹಕ್ಕುಗಳನ್ನು ಪಡೆಯಲು ಹೋರಾಟ ಮುಂದುವರಿಯಲಿದೆ. ಪಶ್ಚಿಮ ಬಂಗಾಳದ ಜನರಿಗಾಗಿ ಹಾಗೂ ಅವರ ಮೂಲಭೂತ ರಕ್ಷಣೆಗಳಿಗಾಗಿ ಹೋರಾಡುವ ನನ್ನ ಬದ್ಧತೆಯನ್ನು ಈ ವಿಶ್ವದ ಯಾವುದೇ ಶಕ್ತಿಯೂ ತಡೆಯಲಾರದು. ಅಕ್ಟೋಬರ್ 2 ಮತ್ತು 3 ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ನಾನು ದೆಹಲಿಗೆ ಹೋಗುತ್ತಿದ್ದೇನೆ. ಸಾಧ್ಯವಾದರೆ ನನ್ನನ್ನು ತಡೆದು ನೋಡಿ” ಎಂದು ಅಭಿಷೇಕ್ ಎಕ್ಸ್​ನಲ್ಲಿ ಬರೆದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!