ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ಕೆಲವು ವ್ಯಕ್ತಿಗಳ ವಿರುದ್ಧ, ದಲಿತ ಸಮುದಾಯದವರನ್ನು ದೇವಾಲಯ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎನ್ನುವ ಆರೋಪದ ಹಿನ್ನಲೆ ಅಟ್ರಾಸಿಟಿ ಕಾಯ್ದೆಯಡಿ 17 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗ್ರಾಮದಲ್ಲಿ ಪರಿಶಿಷ್ಟ ಜನಾಂಗದವರನ್ನು ದೇವಾಲಯ ಪ್ರವೇಶಿಸದಂತೆ ತಡೆಯಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಸಭೆ ಆಯೋಜಿಸಲಾಗಿತ್ತು, ಗ್ರಾಮಸ್ಥ ಶಿವಕುಮಾರ್ ಸಭೆಯಲ್ಲಿ ‘ದೇವಾಲಯದ ಆಸ್ತಿಯನ್ನು ಹರಾಜು ಹಾಕದೆ ಬರಿ ಲಿಂಗಾಯತ ಸಮಾಜದವರು ಮಾತ್ರ ಉಪಯೋಗಿಸುತ್ತಿದ್ದಾರೆ’ ಎಂದು ಹೇಳಿದ್ದರು.ಈ ಹೇಳಿಕೆಯನ್ನು ಕುರಿತು ಕೆಲವು ಜನರು ಅವರನ್ನು ಜಾತಿ ನಿಂದನೆ ಮೂಲಕ ಹಿಂಸಾತ್ಮಕವಾಗಿ ಬೆದರಿಸಿರುವುದಾಗಿ ದೂರು ನೀಡಿದರು. ಶಿವಕುಮಾರ್ ಅವರ ದೂರಿನ ಆಧಾರದ ಮೇಲೆ ಪೊಲೀಸರು ತಕ್ಷಣ ಕ್ರಮ ತೆಗೆದುಕೊಂಡು ಪ್ರಕರಣ ದಾಖಿದ್ದಾರೆ.
ಪ್ರಕರಣದ ನಂತರ, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಚಾಮರಾಜನಗರ ಪಟ್ಟಣದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ದಾಖಲಾದ ದೂರು ಸುಳ್ಳು, ಯಾವುದೇ ಸತ್ಯಾಂಶವಿಲ್ಲ ಎಂದು ಗ್ರಾಮಸ್ಥರು ವಾದಿಸುತ್ತಿದ್ದಾರೆ. ಪೊಲೀಸರು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿದ್ದಾರೆ.