ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮುವಿನ ದೋಡಾ ಜಿಲ್ಲೆಯ ಬಡೇರ್ವಾಹ್ ಪಟ್ಟಣದಲ್ಲಿ ಕರ್ಫ್ಯೂ ಜಾರಿ ಮಾಡಿದ್ದು, ಇಂಟರ್ನೆಟ್ ಸೇವೆಯನ್ನು ಸಹ ಸ್ಥಗಿತ ಮಾಡಲಾಗಿದೆ. ಬಡೆರ್ವಾಹ್ನಲ್ಲಿರುವ ಮಸೀದಿಯಿಂದ ಪ್ರಚೋದನಕಾರಿ ಘೋಷಣೆ ಮಾಡಲಾಗುತ್ತಿದೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸ್ಥಳೀಯವಾಗಿ ಗುರುವಾರ ಉದ್ವಿಗ್ನತೆ ಸೃಷ್ಟಿಯಾಗಿತ್ತು. ಈ ಸಂಬಂಧ ಬಡೇರ್ವಾಹ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲು ಮಾಡಲಾಗಿದೆ.
ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರನ್ನೂ ಬಿಡಲಾಗುವುದಿಲ್ಲ ಎಂದು ಪೊಲೀಸ್ ಮೀಡಿಯಾ ಸೆಂಟರ್ ತಿಳಿಸಿದೆ. ಮುಂಜಾಗ್ರತಾ ಕ್ರಮವಾಗಿ, ಕಿಶ್ತ್ವಾರ್ ಮತ್ತು ರಾಂಬನ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸುವುದರ ಜೊತೆಗೆ ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಶಾಂತಿ ಕಾಪಾಡುವಂತೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮನವಿ ಮಾಡಿದ್ದು, ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ.
ಪ್ರಸ್ತುತ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರನದಲ್ಲಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಡಿಸಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.