ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಸಂಚಲನ ಮೂಡಿಸಿದೆ. ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಬಸ್ ಚಾಲಕನ ಕಾಲು ತುಂಡಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ರಕ್ತಸಿಕ್ತವಾಗಿ ಗಾಯಗೊಂಡಿದ್ದಾರೆ.
ಲೋಕಾಪುರ ಹೊರವಲಯದ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ಚಾಲಕ ವಾಹನದ ಒಳಗೇ ಸಿಲುಕಿಕೊಂಡಿದ್ದರಿಂದ ಅವರ ಕಾಲು ಕತ್ತರಿಸಲ್ಪಟ್ಟಿದೆ ಎಂದು ತಿಳಿದುಬಂದಿದೆ. ಚಾಲಕ ಸೇರಿದಂತೆ ಗಂಭೀರವಾಗಿ ಗಾಯಗೊಂಡಿರುವ ಪ್ರಯಾಣಿಕರನ್ನು ತಕ್ಷಣವೇ ಸ್ಥಳೀಯರ ಸಹಾಯದೊಂದಿಗೆ ಲೋಕಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಲೋಕಾಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಂಚಾರ ಅಸ್ತವ್ಯಸ್ತಗೊಂಡಿದ್ದ ಹೆದ್ದಾರಿಯನ್ನು ಸುಗಮಗೊಳಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

