ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಾನ್ಸ್ಟೇಬಲ್ಗಳು ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ.
ಕಾರಿನಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಗಳಾದ ಅರ್ಜುನ್ ನೆಲ್ಲೂರ(29) ಮತ್ತು ವೀರೇಶ್ ಉಪ್ಪಾರ(31) ಸೇರಿ ಅರ್ಜುನ್ ಚಿಕ್ಕಪ್ಪ ರವಿ ನೆಲ್ಲೂರ(43) ಮೃತರಾಗಿದ್ದಾರೆ.
ಅರ್ಜುನ್ ನೆಲ್ಲೂರ, ವೀರೇಶ್ ಉಪ್ಪಾರ ಮತ್ತು ರವಿ ನೆಲ್ಲೂರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ ಬಳಿಕ ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರತೆಗೆ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿಯಾಗಿವೆ.
ಘಟನೆಯಲ್ಲಿ ಮೃತಪಟ್ಟ ಮೂವರ ಪೈಕಿ ಇಬ್ಬರು ಕಾನ್ಸ್ಟೇಬಲ್ಗಳ ವಿವಾಹ ನಿಶ್ಚಯವಾಗಿತ್ತು. ಅರ್ಜುನ ನೆಲ್ಲೂರ ಮತ್ತು ವೀರೇಶ್ ಉಪ್ಪಾರ ಹಸೆಮಣಿ ಏರುವವರಿದ್ದರು. ಇವರಿಬ್ಬರು ಪೊಲೀಸ್ ಇಲಾಖೆ ಸೇರಿ ಏಳು ವರ್ಷವಾಗಿತ್ತು.
ವೀರೇಶ್ ಉಪ್ಪಾರ ಕೊಪ್ಪಳ ಜಿಲ್ಲಾ ಪೊಲೀಸ್ ವೈರ್ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸಿದರೆ, ಅರ್ಜುನ್ ನೆಲ್ಲೂರ ಹಾವೇರಿ ಜಿಲ್ಲಾ ಪೊಲೀಸ್ ವೈರ್ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.