ಹೊಸದಿಗಂತ ವರದಿ ಬಸವನಬಾಗೇವಾಡಿ:
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರ ಕೂಡಗಿ ಕ್ರಾಸ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ-ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಜರುಗಿದೆ.
ಕಾರಟಗಿಯಿಂದ ಮಹಾರಾಷ್ಟ್ರದ ಶಿರಡಿಗೆ ತೆರಳುತ್ತಿದ್ದ ಕೆಎ-33 ಎನ್-4689 ನೋಂದಣಿ ಸಂಖ್ಯೆಯ ನೂತನ ಕ್ರೆಟಾ ಕಾರು ಬೆಳಿಗ್ಗೆ ಸುಮಾರು 8 ಗಂಟೆ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಕಾರು ಚಲಾಯಿಸುತ್ತಿದ ಹರಿವೆಂಕಟರಾಮ್ (20) ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನೋರ್ವ ಪ್ರಯಾಣಿಕರಾದ ಸತ್ಯವೇಣಿ (36) ಸ್ಥಳದಲ್ಲೇ ಮೃತಪಟ್ಟಿದ್ದು, ಪುತ್ರ ಜಶ್ವಂತ್ (18) ನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತರಾಗಿದ್ದಾರೆ. ಗಾಯಗೊಂಡಿರುವ ರಾಘವೇಂದ್ರ (41) ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಅಪಘಾತದ ಕುರಿತು ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ರಾಘವೇಂದ್ರ ಕುಟುಂಬದವರು ಶಿರಡಿ ಯಾತ್ರೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



